ವೀಕೆಂಡ್ ಗೆ ಶಿವನಸಮುದ್ರದ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಸಾಹಸ ಕ್ರೀಡೆ
ಮಂಡ್ಯ, ಅಕ್ಟೋಬರ್ 26: ಶಿವನಸಮುದ್ರದ ಗಗನಚುಕ್ಕಿಯಲ್ಲಿ ಜಲಪಾತೋತ್ಸವವನ್ನು ನ.9 ಮತ್ತು 10ರಂದು ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಅವರು ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ನಡೆಸಿದ್ದು, ಅಗತ್ಯ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಾರಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಗಗನಚುಕ್ಕಿ ಜಲಪಾತವು ಭೋರ್ಗರೆಯುತ್ತಾ ಕಣ್ಮನ ಸೆಳೆಯುತ್ತಿದೆ. ಹೀಗಾಗಿ ರಾಜ್ಯದ ಹಾಗೂ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದ್ದು, ರಾಜ್ಯ ಹಾಗೂ ದೇಶಕ್ಕೆ ಪರಿಚಯ ಮಾಡಿಕೊಡುವ ಸಲುವಾಗಿ ಗಗನಚುಕ್ಕಿ ಜಲಪಾತೋತ್ಸವ ಹಮ್ಮಿಕೊಳ್ಳಲಾಗಿದೆ.
ಕಣ್ತುಂಬಿಕೊಳ್ಳಿ ಭರಚುಕ್ಕಿ- ಗಗನಚುಕ್ಕಿಗಳ ನೃತ್ಯವೈಭವ!
ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ. ಜನರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮ ವೀಕ್ಷಿಸಲು ಹೆಚ್ಚು ಜನ ಬರಬೇಕು. ಇದಕ್ಕಾಗಿ ಹೆಚ್ಚು ಪ್ರಚಾರ ಮಾಡಿ ಈ ನೈಸರ್ಗಿಕ ಸ್ಥಳವನ್ನು ದೇಶಕ್ಕೆ ಪರಿಚಯಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕೇಳಿಕೊಂಡರು.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಮಿತಿ ರಚಿಸಲಾಗುತ್ತಿದ್ದು, ಜಲಪಾತ ಹಾಗೂ ವೇದಿಕೆಗೆ ವಿದ್ಯುತ್ ಅಲಂಕಾರ ಮಾಡುವಂತೆ ಹಾಗೂ ವಿದ್ಯುತ್ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರಲ್ಲದೆ, ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗುತ್ತಿದೆ.