'ಮುಖ್ಯಮಂತ್ರಿಗಳನ್ನು ಮಂಡ್ಯ ರಸ್ತೆಯಲ್ಲಿ ಓಡಾಡಕ್ಕೆ ಬಿಡಲ್ಲ'
ಮಂಡ್ಯ, ಸೆಪ್ಟೆಂಬರ್ 20: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ವಾಸ್ತವ ಸ್ಥಿತಿಗೆ ವಿರುದ್ಧವಾದದ್ದು ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆಯೇ ರೈತರಿಗೆ ಪರಿಹಾರ ಘೋಷಿಸಬೇಕು. ಇಲ್ಲದಿದ್ದರೆ ಮಂಡ್ಯ ರಸ್ತೆಯಲ್ಲಿ ಅವರನ್ನು ಓಡಾಡುವುದಕ್ಕೆ ಬಿಡುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆ.27ರವರೆಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು, ನೀರು ನಿರ್ವಹಣೆ ಸಮಿತಿ ರಚನೆಯಾಗಬೇಕು ಎಂದು ಸೂಚಿಸಿದೆ.[LIVE: ಸೆ.21 ರಿಂದ 27ರ ವರೆಗೂ ಪ್ರತಿದಿನ 6,000 ಕ್ಯೂಸೆಕ್ಸ್ ನೀರು ಹರಿಸಿ]

ಕಾವೇರಿ ಮೇಲುಸ್ತುವಾರಿ ಸಮಿತಿ 3 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ಸೂಚನೆ ನೀಡಿತ್ತು. ಆ ತೀರ್ಮಾನಕ್ಕೆ ರಾಜ್ಯದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅದರ ಎರಡರಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡಬೇಕಾಗಿದೆ. ಮಂಡ್ಯದ ರೈತರಿಂದ ಪರಿಹಾರಕ್ಕೆ ಒತ್ತಡ ಹೆಚ್ಚಿದೆ.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು. ಸುಪ್ರೀಂ ಕೋರ್ಟ್ ಆದೇಶವನ್ನು ತಿರಸ್ಕರಿಸುವ ಮೂಲಕ ಎಚ್ಚರಿಕೆ ನೀಡಬೇಕು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸಬೇಕು ಎಂದು ಮಾದೇಗೌಡ ಮತ್ತಿತರರು ಆಗ್ರಹಿಸಿದ್ದಾರೆ.
ಈ ನಿರ್ಧಾರಕ್ಕೆ ರಾಜ್ಯದ ಎಲ್ಲ ಜನಪ್ರತಿನಿಧಿಗಳು ಬದ್ಧರಾಗಿರಬೇಕು ಎಂದು ಅವರು ಆಗ್ರಹಿಸಿದರು. ಹೆದ್ದಾರಿಯಲ್ಲಿ ಮಲಗಿದ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಬುಧವಾರ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ.












Click it and Unblock the Notifications