ಮಂಡ್ಯದಿಂದ ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ?
ಮಂಡ್ಯ, ಜನವರಿ 06 : 2019ರ ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಸದ್ಯ, ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಕುರಿತು ವಿವಿಧ ನಾಯಕರು ಹೇಳಿಕೆಗಳನ್ನು ನೀಡಿದ್ದಾರೆ. ಜೆಡಿಎಸ್ ಭದ್ರಕೋಟೆಯಾದ ಮಂಡ್ಯದಲ್ಲಿ ನಿಖಿಲ್ ಅವರನ್ನು ಕಣಕ್ಕಿಳಿಸಿದರೆ, ರಾಜಕೀಯಕ್ಕೆ ಪಾದಾರ್ಪಣೆ ಸುಲಭ ಎಂಬುದು ಲೆಕ್ಕಾಚಾರವಾಗಿದೆ.
ಮಂಡ್ಯದಿಂದ ಸ್ಪರ್ಧಿಸುವ ಕುರಿತು ಮೌನ ಮುರಿದ ನಿಖಿಲ್ ಕುಮಾರಸ್ವಾಮಿ
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಸಲು ದೇವೇಗೌಡರ ಕುಟುಂಬ ತಯಾರಿ ನಡೆಸುತ್ತಿದೆ ಎಂಬ ಸುದ್ದಿಗಳು ಹಬ್ಬಿವೆ. ಹಾಸನ ಕ್ಷೇತ್ರವನ್ನು ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುವ ದೇವೇಗೌಡರು ಮಂಡ್ಯದಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಯೂ ಇದೆ.
ಮಂಡ್ಯ ಲೋಕಸಭಾ ಕ್ಷೇತ್ರದತ್ತ ನಿಖಿಲ್ ಕುಮಾರಸ್ವಾಮಿ ಕಣ್ಣಿಟ್ಟಿದ್ದಾರಾ?
2018ರ ನವೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಎಲ್.ಆರ್.ಶಿವರಾಮೇಗೌಡ ಅವರು ಮಂಡ್ಯದಲ್ಲಿ ಗೆಲುವು ಸಾಧಿಸಿದ್ದಾರೆ. 2019ರ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆಯನ್ನು ವರಿಷ್ಠರು ಅವರಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ದರಿಂದ, ಮಂಡ್ಯದ ಕದನ ಕುತೂಹಲಕ್ಕೆ ಕಾರಣವಾಗಿದೆ....
ಮಂಡ್ಯ ಉಪಚುನಾವಣೆ: ಮೊಮ್ಮಗನಿಗಾಗಿ ದೇವೇಗೌಡ್ರ ಟ್ರಯಲ್ ರನ್ ಸಕ್ಸಸ್
ಎಂ.ಶ್ರೀನಿವಾಸ್ ಹೇಳಿಕೆ
'ನಿಖಿಲ್ ಕುಮಾರಸ್ವಾಮಿಗೆ ಮಂಡ್ಯ ಕ್ಷೇತ್ರದಿಂದ ಟಿಕೆಟ್ ಕೊಡುವಂತೆ ಕೇಳಿಕೊಂಡಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಮಂಡ್ಯದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಮಂಡ್ಯ ಜನರು ಅವರ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ನಿಖಿಲ್ ಏನಾದರೂ ಮಂಡ್ಯದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ' ಎಂದು ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಹೇಳಿದ್ದಾರೆ.
ಸಿ.ಎಸ್.ಪುಟ್ಟರಾಜು ಹೇಳಿಕೆ
'ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದು ಖಚಿತವಾಗಿಲ್ಲ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಂಡ್ಯದಿಂದ ದೇವೇಗೌಡರನ್ನು ಸ್ಪರ್ಧೆ ಮಾಡುವಂತೆ ಕೇಳಿಕೊಂಡಿದ್ದೇವೆ. ನಿಖಿಲ್ ಸ್ಪರ್ಧೆ ಮಾಡಿದರೂ ಓಕೆ' ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಎಲ್.ಆರ್.ಶಿವರಾಮೇಗೌಡ
ಮಂಡ್ಯ ಕ್ಷೇತ್ರದ ಹಾಲಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು, 'ಉಪ ಚುನಾವಣೆಯಲ್ಲಿ ಗೆದ್ದ ನಾನು ಕೆಲವೇ ತಿಂಗಳಿಗೆ ಸಂಸದನಾಗಿಲ್ಲ. ದೇವೇಗೌಡರು ಮತ್ತೊಮ್ಮೆ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ' ಎಂದು ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ ಅವರು, 'ರಾಜಕೀಯ ನನ್ನ ಕಣದಲ್ಲಿ ಬಂದಿದೆ. ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ಅನಿವಾರ್ಯವಾದರೆ ಮಂಡ್ಯದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಚುನಾವಣೆಗೆ ಸ್ಪರ್ಧೆ ಮಾಡಿದರೆ ಸಿನಿಮಾ, ರಾಜಕಾರಣ ಎರಡನ್ನೂ ನೋಡಿಕೊಂಡು ಹೋಗುತ್ತೇನೆ' ಎಂದು ಹೇಳಿದ್ದಾರೆ.