ಉಪ ಚುನಾವಣೆ ಹೊಸ್ತಿಲಲ್ಲಿ ಸಂಸದೆ ಸುಮಲತಾ ಅಚ್ಚರಿಯ ನಡೆ!
ಮಂಡ್ಯ, ಡಿಸೆಂಬರ್ 02 : 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯುತ್ತಿದ್ದು, ಪ್ರಚಾರ ಬಿರುಸಿನಿಂದ ಸಾಗುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಉಪ ಚುನಾವಣೆ ಹೊಸ್ತಿಲಲ್ಲಿ ಅಚ್ಚರಿಯ ಘೋಷಣೆ ಮಾಡಿದ್ದಾರೆ. ಸುಮಲತಾ ನಮ್ಮ ಬೆಂಬಲಕ್ಕೆ ನಿಲ್ಲಬಹುದು ಎಂಬ ಎಲ್ಲಾ ಪಕ್ಷಗಳ ಲೆಕ್ಕಾಚಾರ ತಲೆಕೆಳಗಾಗಿದೆ.
"ವಿಧಾನಸಭೆ ಉಪ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನೂ ಬೆಂಬಲಿಸುವುದಿಲ್ಲ" ಎಂದು ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಕೆ. ಆರ್. ಪೇಟೆ ಕ್ಷೇತ್ರದ ಚುನಾವಣಾ ಚಿತ್ರಣ ಬದಲಾಗುವ ನಿರೀಕ್ಷೆ ಇದೆ.
ಕೆ. ಆರ್. ಪೇಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ, ಕಾಂಗ್ರೆಸ್ನಿಂದ ಕೆ. ಬಿ. ಚಂದ್ರಶೇಖರ್, ಜೆಡಿಎಸ್ನಿಂದ ಬಿ. ಎಲ್. ದೇವರಾಜ್ ಕಣದಲ್ಲಿದ್ದಾರೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಚಾರಕ್ಕೆ ಹೋಗುತ್ತಿಲ್ಲ
"ಕೆ. ಆರ್. ಪೇಟೆ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ಹೋಗುವುದಿಲ್ಲ. ನನ್ನನ್ನು ಮಂಡ್ಯ ಜಿಲ್ಲೆಯ ಜನರು ಅಭಿವೃದ್ಧಿ ಕೆಲಸ ಮಾಡಲು ಆಯ್ಕೆ ಮಾಡಿದ್ದಾರೆ. ಹಾಗಾಗಿ ಪ್ರಚಾರಕ್ಕೆ ಹೋಗುವುದಿಲ್ಲ" ಎಂದು ಸುಮಲತಾ ಹೇಳಿದರು.

ಅಸಮಾಧಾನಗೊಳ್ಳುತ್ತಾರೆ
"ಉಪ ಚುನಾವಣೆಯಲ್ಲಿ ಒಬ್ಬರ ಪರ ಪ್ರಚಾರ ಮಾಡಿದರೆ ಮತ್ತೊಬ್ಬರು ಅಸಮಾಧಾನಗೊಳ್ಳುತ್ತಾರೆ. ಯಾರಿಗೂ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ತಟಸ್ಥವಾಗಿ ಇರುತ್ತೇನೆ" ಎಂದು ಸುಮಲತಾ ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಮಾತಕತೆ ನಡೆಸಿದ್ದರು
ಕೆ. ಆರ್. ಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡರಿಗೆ ಬೆಂಬಲ ನೀಡುವ ಕುರಿತು ಸುಮಲತಾ ಜೊತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತುಕತೆ ನಡೆಸಿದ್ದರು. ಉಪ ಚುನಾವಣೆಯಲ್ಲಿ ಸುಮಲತಾ ಬೆಂಬಲಿಗರು ಯಾರ ಪರವಾಗಿ ನಿಲ್ಲಲಿದ್ದಾರೆ? ಎಂದು ಕಾದು ನೋಡಬೇಕಿದೆ.

ಪಕ್ಷೇತರರಾಗಿ ಗೆದ್ದು ಬಂದಿದ್ದಾರೆ
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಂದಿದ್ದಾರೆ. ಆದರೆ, ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೇ ಅವರಿಗೆ ಬೆಂಬಲ ನೀಡಿತ್ತು.












Click it and Unblock the Notifications