1 ವರ್ಷದ ಕಂದಮ್ಮನ ಎದುರೇ ನೇಣಿಗೆ ಶರಣಾದ ತಾಯಿ!
ಮಂಡ್ಯ, ಜೂನ್ 2 : ಪತ್ರ ಬರೆದಿಟ್ಟು ಕಂದಮ್ಮನ ಕಣ್ಣೇದುರಿನಲ್ಲೇ ತಾಯಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ನಗರದ ಕೆಂಪೇಗೌಡ ಬಡಾವಣೆಯಲ್ಲಿ ಗುರುವಾರ ನಡೆದಿದೆ.
ಬಡಾವಣೆಯ ಕವಿತಾ (36) ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಒಂದು ವರ್ಷದ ಹೆಣ್ಣು ಮಗುವಿನ ಕಣ್ಣೆದುರಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವಿಗಾಗಿ ಕಟ್ಟಿದ್ದ ಜೋಕಾಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕವಿತಾ ಆತ್ಮಹತ್ಯೆ ಮಾಡಿಕೊಂಡ ವಿಚಾರ ಮಧ್ಯಾಹ್ನ 3 ಗಂಟೆಗೆ ತಿಳಿದುಬಂದಿದೆ. ಮಧ್ಯಾಹ್ನ 12:30 ರ ವೇಳೆ ಸಾವನ್ನಪ್ಪಿದ್ದು, ಮಗು ಜೋರಾಗಿ ಅಳುತ್ತಿರುವುದನ್ನು ಕೇಳಿದ ಸ್ಥಳೀಯರು ಕಿಟಕಿಯಲ್ಲಿ ನೋಡಿದಾಗ ಕವಿತಾ ನೇಣಿಗೆ ಶರಣಾಗಿರುವು ಬೆಳಕಿಗೆ ಬಂದಿದೆ.

ಕವಿತಾ 9 ವರ್ಷದ ಹಿಂದೆ ದೈಹಿಕ ಶಿಕ್ಷಕರಾಗಿರುವ ರವಿಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ದಂಪತಿಗೆ 7 ವರ್ಷದ ಗಂಡು ಮಗು, 1 ವರ್ಷದ ಹೆಣ್ಣು ಮಗು ಇದೆ. ಬುಧವಾರ ಬೆಳಗ್ಗೆ ರವಿಕುಮಾರ್ ಶಾಲೆಗೆ ತೆರಳಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಕವಿತಾ ಬರೆದಿರುವ ಡೆತ್ ನೋಟ್ನಲ್ಲಿ ಇಂದು ನನ್ನ ಜೀವನದ ಕೊನೆಯ ದಿನ. ನನ್ನ ಎಲ್ಲಾ ಆಭರಣಗಳು ನನ್ನ ಮಗ ಮತ್ತು ಮಗಳಿಗೆ ಸೇರಬೇಕು. ಇಲ್ಲವಾದರೆ ನಾನು ಮತ್ತು ನನ್ನ ದೇವರು ನಿಮ್ಮನ್ನು ಕ್ಷಮಿಸುವುದಿಲ್ಲ. ಇವು ನಾನು ಕಷ್ಟಪಟ್ಟು ದುಡಿದು ಮಾಡಿಸಿಕೊಂಡಿರುವ ಆಭರಣಗಳು ಎಂದು ಬರೆದಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications