ಮಂಡ್ಯ; ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆ ಸಾವು
ಮಂಡ್ಯ, ನವೆಂಬರ್ 26: ಸಂತಾನಹರಣ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದಿದೆ.
ಆಲಭೂಜನಹಳ್ಳಿ ಗ್ರಾಮದ ಸ್ವಾಮಿ ಎಂಬುವರ ಪತ್ನಿ ಶಿಲ್ಪಾ (24) ಎಂಬಾಕೆಯೇ ಮೃತಪಟ್ಟ ಮಹಿಳೆ. ಸ್ವಾಮಿ ಹಾಗೂ ಶಿಲ್ಪಾಗೆ 4 ವರ್ಷದ ಹೆಣ್ಣು ಮಗು ಹಾಗೂ 2 ತಿಂಗಳ ಗಂಡು ಮಗುವಿದೆ. ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಸಂತಾನಹರಣ ಶಸ್ತ್ರ ಚಿಕ್ತಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಪಾಲ್ಗೊಂಡ ಶಿಲ್ಪಾ ಅವರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ವೇಳೆ ರೋಗಿ ಗಂಭೀರ ಸ್ಥಿತಿಗೆ ತಲುಪಿದ ಕಾರಣ ಅವರನ್ನು ತಕ್ಷಣ ಆಂಬ್ಯುಲೆನ್ಸ್ ನಲ್ಲಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಆದರೆ ಮಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶಿಲ್ಪಾ ಮೃತಪಟ್ಟಿದ್ದಾರೆ.
ಶಿಲ್ಪಾ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಆಲಭೂಜನಹಳ್ಳಿ, ಹೊಂಬೇಗೌಡನದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಗ್ರಾಮಸ್ಥರು, ರೋಗಿಯ ಸಂಬಂಧಿಕರು, ರೈತ ಸಂಘ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ಘಟನೆಗೆ ಕಾರಣರಾದ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮದ್ದೂರು-ಮಳವಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ ಹಾಗೂ ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ 4ಲಕ್ಷ ರೂ ಪರಿಹಾರವನ್ನು ಕೊಡಿಸಿಕೊಡುವುದಾಗಿ ಭರವಸೆ ನೀಡಿದರು.












Click it and Unblock the Notifications