'ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ 5 ಇಂದಿರಾ ಕ್ಯಾಂಟೀನ್'
ಮಂಗಳೂರು, ಅಕ್ಟೋಬರ್ 16 : ರಾಜ್ಯದ ಜಿಲ್ಲಾ ಹಾಗು ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಸಿಎಂ ಸಿದ್ದರಾಮಯ್ಯ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಇಂದಿರಾ ಕ್ಯಾಂಟೀನ್ ಆರಂಭಿಸಲು ಸಿದ್ಧತೆ ನಡೆದಿದೆ.
ರಾಜ್ಯಾದ್ಯಂತ 246 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ
ಜನವರಿಯಿಂದ ಇಂದಿರಾ ಕ್ಯಾಂಟೀನ್ ಕರಾವಳಿಯಲ್ಲಿ ಆರಂಭಗೊಳ್ಳಲಿದ್ದು, ಈಗಾಗಲೇ ಸ್ಥಳ ಆಯ್ಕೆಗೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡಲಾಗಿದೆ. ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, "ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 5 ಮತ್ತು ಉಳ್ಳಾಲ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಆಹಾರ ಪದ್ಧತಿಯ ಪ್ರಕಾರವೇ ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಸಿದ್ದಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಇನ್ನು ವಿಪಕ್ಷಗಳ ಬಗ್ಗೆ ಟೀಕಿಸಿದ ಖಾದರ್, ಕೆಸಿ ವೇಣುಗೋಪಾಲ್ ರವರ ಸಂಘಟನಾತ್ಮಕ ಶೈಲಿಯಿಂದ ಬಿಜೆಪಿ ಹೆದರಿದೆ. ಹಾಗಾಗಿ ಇಲ್ಲಸಲ್ಲದ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.