ಪುತ್ತೂರಿನಲ್ಲಿ ಉಚಿತ ಬಸ್ ಪಾಸ್ ಗಾಗಿ ಎಬಿವಿಪಿ ಬೃಹತ್ ಪ್ರತಿಭಟನೆ
ಮಂಗಳೂರು, ಜುಲೈ 18: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಪುತ್ತೂರು ಕಾಲೇಜು ವಿದ್ಯಾರ್ಥಿಗಳು ಇಂದು ಬುಧವಾರ ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜು ಬಹಿಷ್ಕರಿಸಿ ರಸ್ತೆಗಿಳಿದ ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಉಚಿತ ಬಸ್ ಪಾಸ್ ಗೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ನೆಹರೂ ನಗರದಲ್ಲಿ ಸೇರಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಎಸ್ಸಿ, ಎಸ್ಟಿ ಮಕ್ಕಳಿಗೆ ಮಾತ್ರ ಫ್ರೀ ಬಸ್ ಪಾಸ್ : ವಾಟ್ ಈಸ್ ದಿಸ್ ಬಾಸ್?
ಈ ಮೊದಲು ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು .
ಪೋಲೀಸರ ಅನುಮತಿ ನಿರಾಕರಣೆಯ ನಡುವೆಯೇ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೆ ರಾಜ್ಯ ಸರಕಾರ ಅನ್ಯಾಯ ಎಸಗುತ್ತಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಿಡಿಕಾರಿದರು.
ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಮುಖ್ಯಮಂತ್ರಿ ಹಾಗು ಸಾರಿಗೆ ಸಚಿವರಲ್ಲಿ ಚರ್ಚಿಸುವುದಾಗಿ ಪ್ರಾರ್ಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ತಿಳಿದಿದ್ದರೂ ಈ ವರೆಗೆ ಉಚಿತ ಬಸ್ ಪಾಸ್ ಬಗ್ಗೆ ನಿರ್ಧಾರ ಕೈಗೊಳ್ಳದ ರಾಜ್ಯ ಸರಕಾರದ ದೋರಣೆ ದುರದೃಷ್ಟಕರ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.