ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಭುಗಿಲೆದ್ದ ಬಂಡಾಯ
ಮಂಗಳೂರು, ಏಪ್ರಿಲ್ 21: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರಿಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಬಂಡಾಯದ ಗಾಳಿ ಬೀಸುತ್ತಿದೆ . ಅಭ್ಯರ್ಥಿಗಳ ಘೋಷಣೆ ವಿಚಾರದಲ್ಲಿ ಕಗ್ಗಂಟಾಗಿದ್ದ ಮಂಗಳೂರಿನ 3 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ವರಿಷ್ಠರು ಶುಕ್ರವಾರ ಬಿಡುಗಡೆಗೊಳಿಸಿದ್ದರು.
ಮೂರನೇ ಪಟ್ಟಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಡಾ.ಭರತ್ ಶೆಟ್ಟಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅತ್ಯಂತ ಉತ್ಸುಕರಾಗಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಇದರಿಂದ ನಿರಾಸೆಗೊಂಡಿದ್ದಾರೆ.
ದಕ್ಷಿಣಕನ್ನಡ: ಬಂಟ ಸಮುದಾಯಕ್ಕೆ ಬಿಜೆಪಿ ಮಣೆ, ಭುಗಿಲೆದ್ದ ಅಸಮಾಧಾನ
ಬಿಜೆಪಿ ವರಿಷ್ಠರ ಈ ನಿರ್ಧಾರ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಕ್ಷೇತ್ರದಲ್ಲಿ ಓಡಾಟ ನಡೆಸಿ ಪಕ್ಷವನ್ನು ಸಂಘಟಿಸಿ ವಿಧಾನ ಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರ ಹೆಸರನ್ನು ಕೊನೆ ಕ್ಷಣದಲ್ಲಿ ಕೈ ಬಿಟ್ಟಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.
ಪಾಲೇಮಾರ್ ಹೆಸರು ಕೈ ಬಿಡಲು ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಪಾಲೇಮಾರ್ ಅವರ ಹೆಸರನ್ನು ಕೊನೆಯ ಕ್ಷಣದಲ್ಲಿ ಕೈ ಬಿಟ್ಟಿರುವುದಕ್ಕೆ ಪಾಲೇಮಾರ್ ಅಭಿಮಾನಿಗಳು ಸಹಜವಾಗಿಯೇ ಸಿಟ್ಟಾಗಿದ್ದಾರೆ . ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಪಕ್ಷದ ವರಿಷ್ಠರ ವಿರುದ್ದ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಮಂಗಳೂರು ಉತ್ತರ ಕ್ಷೇತ್ರದ ಮತ್ತೊಬ್ಬ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಯುವ ಮುಖಂಡ ಸತ್ಯಜಿತ್ ಸುರತ್ಕಲ್ ಕೂಡ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನ ಗೊಂಡಿದ್ದಾರೆ. ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ಹಾಗೂ ಬಿಜೆಪಿ ಮುಖಂಡರಾಗಿರುವ ಸತ್ಯಜಿತ್ ಸುರತ್ಕಲ್ ಅವರಿಗೂ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆಗಳಿದ್ದುವು ಎಂದು ಹೇಳಲಾಗಿದೆ .
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಸತ್ಯಜಿತ್ ಸುರತ್ಕಲ್ ಅವರಿಗೆ ಟಿಕೆಟ್ ನಿರಾರರಿಸಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಬಿಜೆಪಿ ವರಿಷ್ಠರ ನಡೆಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಸತ್ಯಜೀತ್ ಅವರ ಮನೆಯಲ್ಲಿ ಬೆಂಬಲಿಗರು ಸಭೆ ನಡೆಸಿದ್ದು, ಬಿಜೆಪಿ ಹೈಕಮಾಂಡ್ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ . ಮುಂಬರುವ ಚುನಾವಣೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಿಂದ ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸತ್ಯಜಿತ್ ಅವರ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಭೆಯಲ್ಲಿ ಬೆಂಬಲಿಗರಿಗೆ ಸತ್ಯಜಿತ್ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಪಾಳಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಚುನಾವಣೆಯ ಸಂದರ್ಭದಲ್ಲಿ ಮುಳುವಾಗಲಿದೆ ಎಂದು ವಿಮರ್ಶಿಸಲಾಗುತ್ತಿದೆ.