ಮಂಗಳೂರು ಐಟಿ ಕಚೇರಿಗೆ ಕಲ್ಲು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್
ಮಂಗಳೂರು, ಆಗಸ್ಟ್ 03 : ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ಖಂಡಿಸಿ ಮಂಗಳೂರಿನಲ್ಲಿರವ ಆದಾಯ ತೆರಿಗೆ ಕಚೇರಿಯ ಮೇಲೆ ಕಲ್ಲು ತೂರಿದ್ದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಐಟಿ ದಾಳಿ: ಡಿಕೆಶಿ ಬೆಂಬಲಿಗರಿಂದ ಮಂಗ್ಳೂರು ಆದಾಯ ಕಚೇರಿಗೆ ಕಲ್ಲು
ನಿನ್ನೆ (ಬುಧವಾರ) ಡಿಕೆಶಿ ಸೇರಿದಂತೆ ಅವರ ಸಂಬಂಧಿ ಹಾಗೂ ಆಪ್ತರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅತ್ತಾವರ ಬಳಿ ಇರುವ ಆದಾಯ ತೆರಿಗೆ ಕಚೇರಿ ಮೇಲೆ ಕಲ್ಲು ತೂರಿ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಇಲಾಖೆಯ ಸೊತ್ತಿಗೆ ಹಾನಿಯಾದ ಬಗ್ಗೆ ಪಾಂಡೇಶ್ವರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಈ ನಡುವೆ ಆದಾಯ ತೆರಿಗೆ ಅಧಿಕಾರಿಗಳು ಕೂಡ ಕಚೇರಿಯಲ್ಲಿ ದಾಂಧಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಪೊಲೀಸರು ಹನ್ನೊಂದು ಮಂದಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡುವಂತಹ ಅಹಿತಕರ ಘಟನೆಗಳು ಮರುಕಳಿಸದಿರಲಿ ಎಂದು ನಿನ್ನೆ ಮುಂಜಾನೆಯಿಂದಲೇ ಸೆಕ್ಷನ್ ಕೆಪಿ 35 ಅನ್ವಯ ನಿರ್ಬಂಧಕಾಜ್ಞ ವಿಧಿಸಲಾಗಿತ್ತು.
ನಿರ್ಬಂಧಕಾಜ್ಞ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾಂಧಲೆ ನಡೆಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ .ಈ ಕಾನೂನು ಉಲ್ಲಂಘನೆ ಅಡಿಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯ ಕೇಳಿಬರುತ್ತಿದೆ .