ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಗೆಲುವಿಗೆ ಉಚ್ಛಾಟಿತ ಶ್ರೀಕರ್ ಪ್ರಭು ಅಡ್ಡಗಾಲು
ಮಂಗಳೂರು, ಮಾರ್ಚ್ 27: ರಾಜ್ಯ ವಿಧಾನಸಭಾ ಚುನಾವಣೆಯ ದಿನ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಪಾಳಯದಲ್ಲಿ ಸಂಕಷ್ಟದ ಕಾರ್ಮೋಡ ಆವರಿಸಲು ಆರಂಭವಾಗಿದೆ.
ಮುಂಬರುವ ಚುನಾವಣೆ ಕಾಂಗ್ರೆಸ್ ಹಾಗು ಬಿಜೆಪಿ ಪಾಲಿಗೆ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ತೆಲುವಿನ ಪತಾಕೆ ಹಾರಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದ್ದರೆ, ಇನ್ನೊಂದಡೆ ಬಿಜೆಪಿಗೆ ಅಭ್ಯರ್ಥಿಗಳ ಅಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಕ್ಷೇತ್ರ ಪರಿಚಯ: ಮಂಗಳೂರು ನಗರ ದಕ್ಷಿಣ ಮತ್ತೆ ಬಿಜೆಪಿ ತೆಕ್ಕೆಗೆ?
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಕೇವಲ ಸುಳ್ಯ ಮಾತ್ರ ಬಿಜೆಪಿ ವಶದಲ್ಲಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಸೋತಿರುವ ಎಲ್ಲಾ ಕ್ಷೇತ್ರಗಳನ್ನು ಮರಳಿ ವಶಪಡಿಸಿಕೊಳ್ಳುವ ತವಕದಲ್ಲಿ ಬಿಜೆಪಿ ಇದೆ. ಆದರೆ ಜಿಲ್ಲೆಯ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು ದಕ್ಷಿಣದಲ್ಲಿ ಬಿಗ್ ಫೈಟ್
ಈ ಪೈಕಿ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ. ಇಲ್ಲಿ ಬಿಜೆಪಿ ಮುಖಂಡರಾದ ವೇದವ್ಯಾಸ್ ಕಾಮತ್ ಹಾಗೂ ಬದ್ರಿನಾಥ್ ಕಾಮತ್ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆಸಿದ್ದಾರೆ. ಇವರಲ್ಲದೆ ಬ್ರಿಜೇಶ್ ಚೌಟಾ, ಯೋಗೀಶ್ ಭಟ್, ಸತೀಶ್ ಕಾಮತ್, ನಾಗರಾಜ್ ಶೆಟ್ಟಿ ಸೇರಿದಂತೆ ಇನ್ನಿತರರು ಕೂಡ ಟಿಕೆಟ್ ರೇಸ್ ನಲ್ಲಿದ್ದಾರೆ.
ಈ ನಡುವೆ ಇನ್ನೊಂದು ಭಾರೀ ಸಂಕಷ್ಟ ಬಿಜೆಪಿಗೆ ಎದುರಾಗಿದೆ. ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಪ್ರಯತ್ನಕ್ಕೆ ಪಕ್ಷದಿಂದ ಉಚ್ಛಾಟನೆಗೊಂಡ ಯುವ ಮುಖಂಡರು ಅಡ್ಡಗಾಲು ಹಾಕುವ ಪ್ರಯತ್ನದಲ್ಲಿದ್ದಾರೆ.
ಉಚ್ಛಾಟತರಿಂದ ಬಿಜೆಪಿ ಗೆಲುವಿಗೆ ಅಡ್ಡಗಾಲು
4 ವರ್ಷಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ಬಿಜೆಪಿಯಿಂದ ಉಚ್ಛಾಟಿತರಾಗಿದ್ದ ಶ್ರೀಕರ ಪ್ರಭು ಈ ಬಾರಿಯ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯ ವೇಳೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸೋಲಿಗೆ ಷಡ್ಯಂತ್ರ ರೂಪಿಸಿದ ಅರೋಪ ಶ್ರೀಕರ ಪ್ರಭು ಮೇಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.
ಒಂದು ಕಾಲದ ಪ್ರಭಾವಿ ಮುಖಂಡ
ಉಚ್ಛಾಟನೆಯಾಗುವವರೆಗೂ ಶ್ರೀಕರ ಪ್ರಭು ಬಿಜೆಪಿಯ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಶ್ರೀಕರ ಪ್ರಭು ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ನಗರ ಅಧ್ಯಕ್ಷರಾಗಿ, ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ಜವಾಬ್ದಾರಿ ನಿಭಾಯಿಸಿದ್ದರು.
ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಪಕ್ಷಕ್ಕೆ ಮರು ಸೇರ್ಪಡೆಗೊಳ್ಳಲು ಶ್ರೀಕರ ಪ್ರಭು ಹಲವಾರು ಪ್ರಯತ್ನಗಳನ್ನು ನಡೆಸಿದರೂ ಬಿಜೆಪಿ ನಾಯಕರ ಮನವೊಲಿಸಲು ಸಫಲರಾಗಿರಲಿಲ್ಲ. ಆದರೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರೊಂದಿಗೆ ನಿಕಟವರ್ತಿಯಾಗಿ ಗುರುತಿಸಿಕೊಂಡಿದ್ದರು.
ಈವರೆಗೆ ರಾಜಕೀಯದಿಂದ ದೂರವೇ ಉಳಿದಿದ್ದ ಶ್ರೀಕರ ಪ್ರಭು ಈಗ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಗೆಲುವಿಗೆ ತಡೆಯೊಡ್ಡಲು ತಂತ್ರ ರೂಪಿಸಿದ್ದಾರೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಕಾಡುತ್ತಿದೆ.
ಪಕ್ಷೇತರರಾಗಿ ಕಣಕ್ಕೆ
ಮಂಗಳೂರಿನಲ್ಲಿ ಶ್ರೀಕರ ಪ್ರಭು ಚುನಾವಣಾ ಪೂರ್ವ ಜನಸಂಪರ್ಕ ಕಚೇರಿ ತೆರೆದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
"ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ತಾಯಿಗೆ ದ್ರೋಹ ಮಾಡುವ ಜಾಯಮಾನ ನನಗಿಲ್ಲ," ಎಂದು ತಿಳಿಸಿದ್ದಾರೆ.
"2014 ರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಷಿ ಕಾರಣ ಕೊಡದೆ ನನ್ನನ್ನು ಪಕ್ಷದಿಂದ ಉಚ್ಛಾಟಿಸಿದ್ದರು. ಬಿಜೆಪಿ ಸಿದ್ಧಾಂತ ಹಿಡಿದೇ ನಾನು ಚುನಾವಣೆಗೆ ಸ್ಪರ್ಧೆ ಮಾಡ್ತೇನೆ . ಬಿಜೆಪಿ ಪಕ್ಷದ ಬಗ್ಗೆ ಕೋಪ ಇಲ್ಲ, ಅವ್ಯವಸ್ಥೆ ಬಗ್ಗೆ ಆಕ್ರೋಶ ಇದೆ," ಎಂದು ಅವರು ಹೇಳಿದರು.
ಬಿಜೆಪಿ ಕಾರ್ಯಕರ್ತನಾಗಿಯೇ ಇರುತ್ತೇನೆ ಎಂದು ಶ್ರೀಕರ ಪ್ರಭು ತಿಳಿಸಿದ್ದಾರೆ. ಶ್ರೀಕರ ಪ್ರಭು ಅವರ ಈ ಹೇಳಿಕೆ ಬಿಜೆಪಿ ಪಾಳಯದಲ್ಲಿ ಭಾರೀ ಗೊಂದಲ ಸೃಷ್ಟಿಸಿದೆ.