ಮಹಾಮಳೆಯ ಪ್ರವಾಹಕ್ಕೆ ನನ್ನನ್ನು ಟೀಕಿಸುವುದು ಸರಿಯಲ್ಲ: ಜೆ.ಆರ್. ಲೋಬೋ
ಮಂಗಳೂರು, ಜೂನ್ 02: ಮಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಹಾಮಳೆಗೆ ನಗರದಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿಗೆ ನಾನೇ ಕಾರಣ ಎಂದು ಟೀಕಿಸುವವರಿಗೆ ಸಾಮಾನ್ಯ ಜ್ಞಾನ ಇಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಕಿಡಿಕಾರಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಮಂಗಳೂರಿನಲ್ಲಿ ಕೇವಲ 6 ಗಂಟೆಯೊಳಗೆ 36 ಮಿಮಿ ಮಳೆಯಾಗಿದೆ. ಮಂಗಳೂರಿನಲ್ಲಿ ಈ ಹಿಂದೆ ಇಷ್ಟು ಪ್ರಮಾಣದಲ್ಲಿ ಮಳೆಯಾಗಿರಲಿಲ್ಲ. ಅದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ನನ್ನ ಮೇಲೆ ವಿನಾ ಕಾರಣ ಬಿಜೆಪಿ ಮುಖಂಡರು ಟೀಕೆ ಮಾಡುತ್ತಿದ್ದಾರೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನ ಸುರತ್ಕಲ್ನಲ್ಲಿ ಗೋಣಿಚೀಲದಲ್ಲಿ ಮೃತದೇಹ ಪತ್ತೆ, ಕೊಲೆ ಶಂಕೆ
ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿ ಪ್ರದೇಶದಲ್ಲಿ ಕೂಡ ಭಾರೀ ಪ್ರವಾಹ ಪರಿಸ್ಥಿತಿ ಸೃಷ್ಠಿಯಾಗಿತ್ತು. ಅದಕ್ಕೆ ಸಂಸದರನ್ನು ದೂರಿ ಪ್ರಯೋಜನವಿಲ್ಲ. ಯಾಕೆಂದರೆ ಜನ ಪ್ರತಿನಿಧಿಗಳು ಯಾರು ತಾಂತ್ರಿಕವಾಗಿ ಪರಿಣತಿ ಹೊಂದಿರುವ ವ್ಯಕ್ತಿಗಳಲ್ಲ. ಆದರೆ ಅವರಿಗೆ ತಾಂತ್ರಿಕ ಸಲಹೆ ನೀಡುವವರೇ ಈ ಪರಿಸ್ಥಿತಿಗಳಿಗೆ ಕಾರಣ ಎಂದು ಅವರು ಅಭಿಪ್ರಾಯ ಪಟ್ಟರು.
ಕಳೆದ ಚುನಾವಣೆಯಲ್ಲಿ ನಾನು ಅನಿರೀಕ್ಷಿತವಾಗಿ ಸೋಲು ಕಂಡಿದ್ದೇನೆ. ಈ ಬಗ್ಗೆ ಇವಿಎಂ ಮೇಲೆ ಅನುಮಾನ ಇದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು. ನಾನು ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಿದ್ದರೂ ಜನರು ನನಗೆ ಮತ ನೀಡಲಿಲ್ಲ ಎಂದು ಒಪ್ಪಿಕೊಳ್ಳುಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.