ಬ್ಯಾಂಕ್ ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರ ಬಂಧನ
ಮಂಗಳೂರು, ಸೆಪ್ಟೆಂಬರ್ 10: ಬ್ಯಾಂಕ್ ಪರೀಕ್ಷೆ ಬರೆಯಲು ಬಂದಿದ್ದ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ವಿವಿಧ ಹುದ್ದೆಗಳಿಗೆ ಇಂದು ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯುತ್ತಿದ್ದು ಮಂಗಳೂರು ಹೊರವಲಯದ ಬೊಂದೇಲ್ ನಲ್ಲಿರುವ ಬೆಸೆಂಟ್ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬ್ಯಾಂಕ್ ಪರೀಕ್ಷೆ ನಡೆಸಲಾಗುತ್ತಿದೆ.
ಹಲವು ರಾಜ್ಯಗಳ ಅಭ್ಯರ್ಥಿಗಳು ಭಾಗಿ
ಈ ಹಿನ್ನೆಲೆಯಲ್ಲಿ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ್ದ ಕರ್ನಾಟಕದ ಅಭ್ಯರ್ಥಿಗಳು ಸೇರಿದಂತೆ ಕೇರಳ, ತಮಿಳುನಾಡು ,ಆಂಧ್ರ ಸೇರಿದಂತೆ ಇತರ ರಾಜ್ಯಗಳ ಅಭ್ಯರ್ಥಿಗಳು ಈ ಪರೀಕ್ಷೆ ಎದುರಿಸುತ್ತಿದ್ದಾರೆ .
ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ತಡೆ
ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಡೆಯೊಡ್ಡಲು ಯತ್ನಿಸಿದರು. ಪರೀಕ್ಷಾ ಕೇಂದ್ರಕ್ಕೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು .
ಬ್ಯಾಂಕ್ ನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ
ಈ ಮೊದಲು ಪರೀಕ್ಷಾ ಕೇಂದ್ರದ ಎದುರು ಜಮಾಯಿಸಿದ ಕರವೇ ಕಾರ್ಯಕರ್ತರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನ ಆಡಳಿತ ಮಂಡಳಿ ಕನ್ನಡ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು .
ಅನ್ಯ ರಾಜ್ಯದವರಿಗೆ ಮಣೆ
ಕನ್ನಡಿಗರ ಬ್ಯಾಂಕ್ ಆಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ. ಕನ್ನಡಿಗರಿಗೆ ಆದ್ಯತೆ ನೀಡದೇ ಅನ್ಯ ರಾಜ್ಯದವರಿಗೆ ಮಣೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು .
ಬ್ಯಾಂಕ್ ಪರೀಕ್ಷೆ ಕೂಡಲೆ ರದ್ದುಗೊಳಿಸಿ
ಬ್ಯಾಂಕ್ ತನ್ನ ಈ ಧೋರಣೆ ನಿಲ್ಲಿಸಿ ಬ್ಯಾಂಕ್ ಪರೀಕ್ಷೆಯನ್ನು ಈ ಕೂಡಲೇ ರದ್ದು ಮಾಡಬೇಕು ಹಾಗೂ ಕನ್ನಡಿಗರಿಗೆ ಆದ್ಯತೆ ನೀಡಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು .
ಸೆಪ್ಟೆಂಬರ್ 16 ರಂದು ಉಗ್ರ ಹೋರಾಟ
ಒಂದೊಮ್ಮೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ತನ್ನ ಹಠಮಾರಿ ಧೋರಣೆ ಮುಂದುವರೆಸಿದರೆ ಇದೇ ಬರುವ ಸೆಪ್ಟೆಂಬರ್ 16 ರಂದು ಉಗ್ರ ಹೋರಾಟ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಸಿದ್ದಾರೆ .