ಮೋದಿ ಸರಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಮೇ 26: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ನಾಲ್ಕು ವರ್ಷ ಪೂರೈಸಿದ ಹರ್ಷದಲ್ಲಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ದೇಶದಾದ್ಯಂತ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಇಂದು ಮಂಗಳೂರಿನಲ್ಲೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಸೇರಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ತೈಲ ಬೆಲೆಯೇರಿಕೆ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಭಿತ್ತಿಪತ್ರಗಳನ್ನು ಹಿಡಿದು ಮೋದಿ ಸರಕಾರಕ್ಕೆ ಧಿಕ್ಕಾರ ಕೂಗಿದರು.
ಮೋದಿ ಸರಕಾರದಲ್ಲಿ ತೈಲ ಬೆಲೆ ಮಾತ್ರ ಐತಿಹಾಸಿಕ: ಮಾಯಾವತಿ ವ್ಯಂಗ್ಯ
ಕೇಂದ್ರ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆಹಾರ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಅಚ್ಛೇ ದಿನ್ ಗಳ ಬಣ್ಣ ಬಣ್ಣದ ಕನಸು ತೋರಿಸಿ ಮೋದಿ ಅಧಿಕಾರದ ಗದ್ದುಗೆ ಏರಿದರು. ಕಳೆದ ನಾಲ್ಕು ವರ್ಷದಲ್ಲಿ ಅಚ್ಛೇ ದಿನ್ ಯಾರಿಗೆ ಬಂದಿದೆ ಎಂದು ಮೋದಿ ಸ್ಪಷ್ಟ ಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಯುತ್ತಿದ್ದಲ್ಲಿಗೆ ಆಗಮಿಸಿದ ಶಾಸಕ ಯು.ಟಿ. ಖಾದರ್ ಪ್ರತಿಭಟನೆಯಲ್ಲಿ ಭಾಗವಹಿಸಿದರು . ಈ ಸಂದರ್ಭ ಮಾತನಾಡಿದ ಖಾದರ್ ಅವರು, "ಮೋದಿ ಅಧಿಕಾರಕ್ಕೆ ಬಂದಾಗ ತಾನು ದೇಶದ ಚೌಕಿದಾರ್ ಆಗುತ್ತೇನೆ ಎಂದಿದ್ದರು. ಆದರೆ ಇವರ ಜೊತೆ ಫೋಟೋ ತೆಗೆಸಿಕೊಂಡು ಕೆಲವರು ಸಾವಿರಾರು ಕೋಟಿ ಸಮೇತ ವಿದೇಶಕ್ಕೆ ಹಾರಿದ್ದಾರೆ," ಎಂದು ವ್ಯಂಗ್ಯವಾಡಿದರು.