ಕರಾವಳಿ ಉತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಈಜು ಸ್ಪರ್ಧೆ
ಮಂಗಳೂರು, ಜನವರಿ. 02 : ಕರಾವಳಿ ಉತ್ಸವ ಅಂಗವಾಗಿ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ-ಬಾಲಕಿಯರ ಮುಕ್ತ ಈಜು ಸ್ಪರ್ಧೆಯು ಪಾಲಿಕೆಯ ಈಜುಕೊಳದಲ್ಲಿ ಭಾನುವಾರ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾಡಳಿತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು.
ಅಂತಾರಾಷ್ಟ್ರೀಯ ಈಜುಪಟು ವೈಷ್ಣವ್ ಬಲೂನ್ ಹಾರಿಸುವ ಮೂಲಕ ಈಜು ಸ್ಪರ್ಧೆಗೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ.
ಈಗಾಗಲೇ 12.50 ಕೋಟಿ ರು ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಈಜುಕೊಳ ನಿರ್ಮಾಣ ಮಾಡಲಾಗುತ್ತಿದೆ. ಓಲಿಂಪಿಕ್ಸ್ ಈಜು ಸ್ಪರ್ಧೆಯಲ್ಲಿ ಯಾವುದೇ ಚಿನ್ನದ ಪದಕವನ್ನು ಪಡೆಯಲು ಸಾಧ್ಯವಾಗಿಲ್ಲ.
ಮುಂದಿನ ದಿನಗಳಲ್ಲಿ ಮಂಗಳೂರಿನ ಈಜು ಸ್ಪರ್ಧಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡುವಂತಾಗಲಿ ಎಂದು ಹೇಳಿದರು.
ಕಾರ್ಪೊರೇಟರ್ ಜಯಂತಿ ಆಚಾರ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಪ್ರದೀಪ್ ಡಿಸೋಜ, ನಗರ ಪಾಲಿಕೆಯ ಈಜುಕೊಳದ ಮ್ಯಾನೇಜರ್ ರಮೇಶ್, ವಾಲಿಬಾಲ್ ತರಬೇತುದಾರ ನಾರಾಯಣ್ ಉಪಸ್ಥಿತರಿದ್ದರು.