ಎಚ್.ಡಿ.ಕೆ, ಕಾಂಗ್ರೆಸ್ ಹೈಕಮಾಂಡಿಗೆ ಸ್ಪಷ್ಟ ಸಂದೇಶ ರವಾನಿಸಿದ ಸಿದ್ದರಾಮಯ್ಯ
ಮಂಗಳೂರು ಜೂನ್ 27: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿರುವ ಧರ್ಮಸ್ಥಳದ ಶಾಂತಿವನದಲ್ಲಿ ನಡೆಯುತ್ತಿರುವ ರಾಜಕೀಯ ಬೇಳವಣಿಗೆಗಳು ಭಾರೀ ಪ್ರಾಮುಖ್ಯತೆ ಪಡೆಯುತ್ತಿವೆ. ಕಳೆದ 11 ದಿನಗಳಿಂದ ಧರ್ಮಸ್ಥಳ ಸಮೀಪದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಗೆ ಒಳಗಾಗಿರುವ ಸಿದ್ದರಾಮಯ್ಯ ಶಾಂತವಾಗಿಯೇ ಒಂದೊಂದಾಗಿ ರಾಜಕೀಯ ದಾಳಗಳನ್ನು ಉರುಳಿಸುತ್ತಿದ್ದಾರೆ.
ಇಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ನಾಯಕರನ್ನೇ ಬೆಚ್ಚಿ ಬೀಳಿಸುತ್ತಿವೆ. ಈ ರಾಜಕೀಯ ಬೆಳವಣಿಗೆಗಳ ಮೂಲಕ ಸಿದ್ದರಾಮಯ್ಯ ಮತ್ತೆ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಗೆ ತಮ್ಮನ್ನು ನಿರ್ಲಕ್ಷಿಸದಿರಿ ಎನ್ನುವ ಸ್ಪಷ್ಟ ಸಂದೇಶವನ್ನು ಅವರು ರವಾನಿಸುತ್ತಿದ್ದಾರೆ.
ಸಿದ್ದು ಟೀಂ ಭಿನ್ನಾಭಿಪ್ರಾಯ ಜ್ವಾಲೆಗೆ ಕರಗಿ ಹೋಗುತ್ತದೆಯೇ ಮೈತ್ರಿ?
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಳೆದ ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿ ಗಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಾಲಮನ್ನಾ ಸೇರಿದಂತೆ ಕೆಲ ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ಪಡೆದುಕೊಂಡಿದ್ದರು ಎನ್ನಲಾಗಿದೆ. ಈ ಬೆಳವಣಿಗೆಗಳಿಂದ ಸಿದ್ದರಾಮಯ್ಯ ಅಸಮಾಧಾನ ಗೊಂಡಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸದೇ ಎಚ್.ಡಿ.ಕೆ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದರ ವಿರುದ್ಧ ಸಿದ್ದರಾಮಯ್ಯ ಸಿಡಿದೆದ್ದಿದ್ದಾರೆ. ತಾನಿನ್ನೂ ರಾಜಕೀಯವಾಗಿ ಬಲಿಷ್ಠವಾಗಿರುವ ಸಂದೇಶ ರವಾನೆಗೆ ಕಾಯುತ್ತಿದ್ದ ಸಿದ್ದರಾಮಯ್ಯ ಈಗ ತಮ್ಮ ದಾಳಗಳನ್ನು ಒಂದೊಂದಾಗಿ ಉರುಳಿಸಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರ್ಕಾರ ಉಳಿಯಲ್ಲ: ಕಾಂಗ್ರೆಸ್ ಶಾಸಕ
ಕಳೆದ ಒಂದು ವಾರಗಳಿಂದ ಶಾಂತಿವನದಲ್ಲಿ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯರ ಬೆಂಬಲಿಗ ಶಾಸಕರು ಶಾಂತಿವನಕ್ಕೆ ಆಗಮಿಸಿ ಅವರನ್ನು ಭೇಟಿಯಾಗಿ ರಹಸ್ಯವಾಗಿ ಚರ್ಚೆ ನಡೆಸುತ್ತಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಳ್ಳುತ್ತಿದೆ.
ಕಳೆದ ಭಾನುವಾರ ಏಕಾಏಕಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಶಾಂತಿವನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಅವರ ನಡುವೆ ಕೊಠಡಿ ಒಂದರಲ್ಲಿ ರಹಸ್ಯ ಮಾತುಕತೆ ನಡೆದಿತ್ತು. ನಂತರ ಹಲವಾರು ಕಾಂಗ್ರೆಸ್ ಮುಖಂಡರು ಶಾಂತಿವನಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಇಂದು ಮಾಜಿ ಸಚಿವ ಹಾಗು ಸಿದ್ದರಾಮಯ್ಯ ಆಪ್ತರಾಗಿರುವ ಆಂಜನೇಯ ಅವರು ಶಾಂತಿವನಕ್ಕೆ ಬಂದು ಸಿದ್ದರಾಮಯ್ಯ ಅವರಲ್ಲಿ ಚರ್ಚೆ ನಡೆಸಿದ್ದಾರೆ. ನಂತರ ಶಾಂತಿವನದಲ್ಲಿ ಸಿದ್ದರಾಮಯ್ಯ ಅವರನ್ನು ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಇತರ 8 ಶಾಸಕರು ಭೇಟಿ ಮಾಡಿದರು. ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಜಾರಕಿಹೊಳಿ ತಂಡ ಶಾಂತಿ ವನದಿಂದದಿಂದ ತೆರಳಿದೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವ ಕಲ್ಯಾಣ ಶಾಸಕ ಬಿ. ನಾರಾಯಣ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇವೆ. ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ಸರ್ಕಾರದ ಬಹುಮುಖ್ಯ ವ್ಯಕ್ತಿ. ಸಿದ್ದರಾಮಯ್ಯರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ? ಎಂದು ಪ್ರಶ್ನಿಸಿದ್ದಾರೆ.
ಇಲ್ಲಿ ಗಮನಿಸ ಬೇಕಾದ ಹೇಳಿಕೆ ಎಂದರೆ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದರೆ ಸರ್ಕಾರ ಉಳಿಯುತ್ತಾ? ಎನ್ನುವ ಹೇಳಿಕೆ. ಈ ಹೇಳಿಕೆ ಮೂಲಕ ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ವಿಮರ್ಶಿಸಲಾಗಿದೆ.
ಮಾಜಿ ಸಚಿವ ಟಿ.ಬಿ ಜಯಚಂದ್ರ ಕೂಡ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಸಿದ್ದರಾಮಯ್ಯ ಭೇಟಿಗಾಗಿ ಶಾಂತಿವನಕ್ಕೆ ಬಂದಿದ್ದ ಟಿ.ಬಿ. ಜಯಚಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗದೇ ತೆರಳಿದ ಪ್ರಸಂಗ ಗಮನ ಸೆಳೆದಿದೆ. ವಿಶ್ರಾಂತಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ , ಟಿ.ಬಿ. ಜಯಚಂದ್ರ ಅವರನ್ನು ಭೇಟಿಯಾಗಲು ನಿರಾಕರಿಸಿದರು ಎಂದು ಹೇಳಲಾಗಿದೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿ.ಬಿ. ಜಯಚಂದ್ರ, ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇನೆ . ಸಿದ್ದರಾಮಯ್ಯ ಅವರಿಗೆ ನನ್ನಲ್ಲಾಗಲಿ ಮೈತ್ರಿ ಸರಕಾರದ ಮೇಲಾಗಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಅವರು ಈ ಮೈತ್ರಿ ಸರಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರು. ಹಾಗಾಗಿ ಮಾತುಕತೆ ನಡೆಸುತ್ತೇನೆ. ಅದರಲ್ಲೇನು ವಿಶೇಷ ಎಂದು ಅವರು ಪ್ರಶ್ನಿಸಿದರು.