ಸಚಿವ ರಮಾನಾಥ ರೈ ಆಪ್ತನ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ
ಬಂಟ್ವಾಳ, ಮೇ 11: ಬುಧವಾರ ರಮಾನಾಥ ರೈ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಇದೀಗ ಇನ್ನೋರ್ವ ಆಪ್ತ, ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಚಿವ ರಮಾನಾಥ್ ರೈ ಆಪ್ತ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ಗುರುವಾರ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅಲ್ಲದೇ ಮನೆಯ ಸಾಮಾಗ್ರಿಗಳು ಮತ್ತು ಬಿಎಂಡಬ್ಲ್ಯೂ ಕಾರನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಡೆಯಲು ಬಂದ ಇತರ ಮೂವರ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ರಾಜಕೀಯ ತಿರುವನ್ನು ಪಡೆದುಕೊಂಡಿದೆ. ಸಚಿವ ರಮಾನಾಥ ರೈ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಹಲ್ಲೆಗೆ ಗುರಿಯಾದ ಕಾಂಗ್ರೆಸ್ ಮುಖಂಡ ಸಂಜೀವ ಪೂಜಾರಿ ಬಾರ್ ಹೊಂದಿದ್ದಾರೆ.