ವಿನಾಯಕ ಬಾಳಿಗ ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು
ಮಂಗಳೂರು, ಅಕ್ಟೋಬರ್, 31: ಮಂಗಳೂರಿನ ಆರ್ ಟಿಐ ಕಾರ್ಯಕರ್ತ ವಿನಾಯಕ ಪಿ . ಬಾಳಿಗಾ ಅವರ ಕೊಲೆ ಪ್ರಕರಣದ ಎರಡನೇ ಆರೋಪಿ ಹಾಗೂ ಮೊದಲನೇ ಆರೋಪಿ ನರೇಶ್ ಶೆಣೈಯ ಸಹಚರ ಶ್ರೀಕಾಂತ್ಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿನಾಯಕ ಬಾಳಿಗಾ ಕೊಲೆ ಸಂಚು ರೂಪಿಸುವುದರಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೂನ್ ತಿಂಗಳಲ್ಲಿ ಶ್ರೀಕಾಂತ್ ನನ್ನು ಬಂಧಿಸಲಾಗಿತ್ತು. ಜುಲೈ 25ರಂದು ಜಾಮೀನು ಕೋರಿ ಈತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ .
1ಲಕ್ಷ ರೂ. ಮೌಲ್ಯದ ಬಾಂಡ್ ಮತ್ತು ಒಬ್ಬರ ವೈಯಕ್ತಿಕ ಭದ್ರತೆ ಒದಗಿಸಬೇಕು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು , ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗಬೇಕು ಹಾಗೂ ಬರ್ಕೆ ಪೊಲೀಸ್ ಠಾಣೆಗೆ ನಿಗದಿತ ದಿನಗಳಂದು ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ ನ್ಯಾಯಾಧೀಶ ಡಿ. ಸರ್ವೋದಯ ಶೆಟ್ಟಿಗಾರ್ ಜಾಮೀನು ಮಂಜೂರು ಮಾಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು . ಈ ಪ್ರಕರಣದಲ್ಲಿ ಶ್ರೀಕಾಂತ್ ಸಂಚು ರೂಪಿಸುವುದರಲ್ಲಿ ಮಾತ್ರ ಭಾಗಿಯಾಗಿದ್ದ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಮಾನ್ಯ ಮಾಡಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.