ಮಂಗಳೂರು: ಪ್ರಚೋದನಾತ್ಮಕ ಪೋಸ್ಟ್, ವಾಟ್ಸಾಪ್ ಗ್ರೂಪ್ ಅಡ್ಮಿನ್ ಬಂಧನ
ಮಂಗಳೂರು, ಜನವರಿ 13: ವಾಟ್ಸಪ್ ಗ್ರೂಪ್ ಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹರಿಬಿಟ್ಟ ಆರೋಪದ ಮೇಲೆ ದಕ್ಷಿಣ ಕನ್ನಡದ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬಾಲಕೃಷ್ಣ ಪೂಜಾರಿ, ಸತೀಶ್ ಶೆಟ್ಟಿ ಇರಾ ಎಂದು ಗುರುತಿಸಲಾಗಿದೆ. ಇವರು
ಅನ್ಯ ಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಪೋಸ್ಟ್ ಗಳನ್ನು ವಾಟ್ಸಪ್ ಗ್ರೂಪ್ ನಲ್ಲಿ ಹರಿಬಿಟ್ಟಿದ್ದರು ಎಂದು ಹೇಳಲಾಗಿದೆ.
ಮೌರಿ ಮತ್ತು ಪಣೋಲಿಬೈಲ್ ಹೆಸರಿನ ವಾಟ್ಸಪ್ ಗ್ರೂಪ್ ಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪೋಸ್ಟ್ ಗಳನ್ನು ಇವರು ಹರಿಬಿಟ್ಟಿದ್ದರು ಎಂಬ ಆರೋಪ ಹೊರಿಸಲಾಗಿದೆ. ಐಪಿಸಿ ಸೆಕ್ಷನ್ 153(ಎ), 354, 504 ಅಡಿಯಲ್ಲಿ ಈ ಇಬ್ಬರು ಆರೋಪಿಗಳ ವಿರುದ್ಧ ಕೇಸು ದಾಖಲು ಮಾಡಲಾಗಿದೆ.
"ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಗ್ರೂಪ್ ಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಾಗೂ ಕೋಮು ಭಾವನೆ ಕೆರಳಿಸುವಂತಹ ಬರಹಗಳನ್ನು ಹರಿ ಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಸುಧೀರ್ ರೆಡ್ಡಿ ಎಚ್ಚರಿಸಿದ್ದಾರೆ.