ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ: ಪೊಲೀಸರಿಗೆ 1 ಲಕ್ಷ ರೂ.ಬಹುಮಾನ ಘೋಷಿಸಿದ ಸಚಿವ ಖಾದರ್
ಮಂಗಳೂರು, ನವೆಂಬರ್. 29: ತೋಟ ಬೆಂಗ್ರೆಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಅತೀ ಶೀಘ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳ ತಂಡಕ್ಕೆ ನಗದು ಬಹುಮಾನ ಘೋಷಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿ ತ್ವರಿತವಾಗಿ ಕಾರ್ಯಾಚರಣೆಗೆ ಇಳಿದು ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಾಗರೀಕರ ವತಿಯಿಂದ 1 ಲಕ್ಷ ರೂಪಾಯಿ ಮೊತ್ತವನ್ನು ಬಹುಮಾನವಾಗಿ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣದಲ್ಲಿ ಯಾವುದೇ ದೂರು ಬಾರದಿದ್ದರೂ, ಪ್ರಕರಣದ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಸರ್ವತ್ರ ಪ್ರಶಂಸನೆಗೆ ಪಾತ್ರವಾಗಿದೆ. ಇದಕ್ಕಾಗಿ ಪೊಲೀಸರನ್ನು ಅಭಿನಂಧಿಸುವುದಾಗಿ ಸಚಿವರು ಹೇಳಿದರು.

ಸಂತ್ರಸ್ತ ಯುವತಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಬೆಂಗ್ರೆ ಪ್ರದೇಶದಲ್ಲಿ ಪೊಲೀಸ್ ಔಟ್ ಪೋಸ್ಟ್ ತೆರೆಯಲು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.
ಇಂತಹ ಅತ್ಯಾಚಾರ ಪ್ರಕರಣಗಳ ಆರೋಪಿಗಳ ಪರ ಯಾವುದೇ ನ್ಯಾಯವಾದಿಗಳು ವಾದಿಸಲು ಮುಂದೆ ಬಾರದೆ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.












Click it and Unblock the Notifications