ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ; ಒಂದೇ ದಿನದಲ್ಲಿ 29 ಮಂದಿ ಆಸ್ಪತ್ರೆಗೆ ದಾಖಲು
ಮಂಗಳೂರು, ಜುಲೈ 24: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದೆ. ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಮತ್ತೆ ಡೆಂಗ್ಯೂ ಜ್ವರ ಶಂಕೆ ವ್ಯಕ್ತವಾಗಿರುವ 29 ಮಂದಿಯು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ಒಟ್ಟಾರೆ ಕಳೆದ ಒಂದು ವಾರದಲ್ಲಿ 163 ಮಂದಿ ಡೆಂಗ್ಯೂ ಜ್ವರಕ್ಕಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದು ವರದಿಯಾಗಿದೆ.
ಡೆಂಗ್ಯೂ; ಚಿಕಿತ್ಸೆ ಫಲಿಸದೆ ಮಂಗಳೂರಿನಲ್ಲಿ ಪತ್ರಕರ್ತ ಸಾವು
ಈ ನಡುವೆ ಡೆಂಗ್ಯೂ ಬಾಧಿತ ಪ್ರದೇಶಗಳಿಗೆ ವರದಿ ಮಾಡಲು ತೆರಳಿದ್ದ ವಿವಿಧ ಖಾಸಗಿ ಸುದ್ದಿ ವಾಹಿನಿ ಮತ್ತು ಪತ್ರಿಕೆಗಳ ವರದಿಗಾರರು ಹಾಗು ಕ್ಯಾಮರಾ ಮೆನ್ ಗಳಿಗೂ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಸತತ ಪ್ರಯತ್ನ ನಡೆಸುತ್ತಿದೆ. ಫಾಗಿಂಗ್, ಮನೆ ಮನೆ ಭೇಟಿ, ಪರಿಶೀಲನೆ ಪ್ರತಿದಿನ ನಡೆಯುತ್ತಿದೆ. ಆದಾಗ್ಯೂ ಡೆಂಗ್ಯೂ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ 29 ಮಂದಿಯಲ್ಲಿ ಜ್ವರ ಕಾಣಿಸಿಕೊಂಡಿದೆ. ಈ ಪೈಕಿ 26 ಮಂದಿ ಮಂಗಳೂರಿನವರಾದರೆ, ಓರ್ವರು ಸುಳ್ಯ ತಾಲೂಕಿನವರು. 2 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.
ಸೊಳ್ಳೆ ಉತ್ಪತ್ತಿಗೆ ಪೂರಕ ತಾಣವನ್ನು ಶುಚಿಗೊಳಿಸದೆ ಹಾಗೆಯೇ ಬಿಡುವ ಕಟ್ಟಡ, ಮನೆ, ಇತರ ವ್ಯಾಪಾರ ಕೇಂದ್ರಗಳ ಮೇಲೆ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರದಿಂದಲೇ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾಗಿದೆ.
ದಕ್ಷಿಣ ಕನ್ನಡದಲ್ಲಿ 441 ಡೆಂಗ್ಯೂ ಪ್ರಕರಣ; 5 ತಂಡಗಳಿಂದ ಕ್ಷಿಪ್ರ ಕಾರ್ಯಾಚರಣೆ
ಮಂಗಳೂರು ಮಹಾನಗರದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಿಲ್ಲೆಯ ವೈದ್ಯಕೀಯ ಕಾಲೇಜುಗಳು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಲು ಮುಂದೆ ಬಂದಿವೆ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಡೆಂಗ್ಯೂ ನಿಯಂತ್ರಣ ಚಟುವಟಿಕೆಗಳ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳು ಅಗತ್ಯ ಸಹಕಾರ ನೀಡಲು ಒಪ್ಪಿಕೊಂಡಿದ್ದಾರೆ.