ಉಳ್ಳಾಲದಲ್ಲಿ ಕಡಲಕೊರೆತ 41 ಮನೆಗಳಿಗೆ ಹಾನಿ
ಮಂಗಳೂರು, ಜುಲೈ 16 : ಮಂಗಳೂರು ಹೊರವಲಯದ ಉಳ್ಳಾಲ, ಸೋಮೇಶ್ವರ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಲ್ಲಿ ಕಡಲಕೊರೆತ ತೀವ್ರಗೊಂಡಿದೆ. ಸುಮಾರು 41 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದೆ.
ವಸತಿ ಸಚಿವ ಯು.ಟಿ.ಖಾದರ್ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಕುಟುಂಬಗಳಿಗೆ ಪರ್ಯಾಯ ನಿವೇಶನ ಗುರುತಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಡಲಕೊರೆತದಿಂದ ಹೆಚ್ಚು ಅಪಾಯದಲ್ಲಿರುವ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಿನ 15 ದಿನದಲ್ಲಿ ಸೂಕ್ತವಾದ ನಿವೇಶನ ಗುರುತಿಸಿ, ಮಂಜೂರುಗೊಳಿಸುವಂತೆ ಮಂಗಳೂರು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಮಂಗಳೂರು ಹೊರವಲಯದ ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು ಮತ್ತಿತರ ಕಡೆ ಕಡಲಕೊರೆತ ನಿಯಂತ್ರಣಕ್ಕೆ ತಡೆಗೋಡೆ ನಿರ್ಮಿಸಲಾಗಿದ್ದರೂ ಕಡಲು ಪ್ರಕ್ಷುಬ್ಧ ಗೊಂಡಿರುವ ಹಿನ್ನೆಲೆಯಲ್ಲಿ ತಡೆಗೋಡೆ ಮೇಲಿಂದ ನೀರು ಹರಿದುಬರುತ್ತಿದೆ.
'ಪ್ರಾಕೃತಿಕ ದುರಂತಗಳ ನಿಯಂತ್ರಣ ಕಷ್ಟಸಾಧ್ಯ. ಕಡಲ ತೀರದಲ್ಲಿರುವ ಮನೆಗಳು ಸದಾ ಅಪಾಯಕಾರಿಯಾಗಿವೆ. ಈ ನಿಟ್ಟಿನಲ್ಲಿ ಇಂತಹ ಮನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ' ಎಂದು ಖಾದರ್ ಹೇಳಿದರು.
ಸೋಮೇಶ್ವರದಲ್ಲಿ ಈಗಾಗಲೇ 1 ಕಿ.ಮೀ. ಸಮುದ್ರ ತಿರದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ. ಇಲ್ಲಿ ಮತ್ತೆ 300 ಮೀಟರ್ ತಡೆಗೋಡೆ ನಿರ್ಮಿಸಲು ಆದೇಶಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
ಈಗಾಗಲೇ ಮನೆ ಹಾನಿಗೀಡಾದ ಸಂತ್ರಸ್ತರಿಗೆ ಉಳ್ಳಾಲ ದರ್ಗಾ ಸಮಿತಿ ಮತ್ತು ಸ್ಥಳೀಯರ ನೆರವಿನಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ . ಅಗತ್ಯ ಬಿದ್ದಲ್ಲಿ ಇನ್ನಷ್ಟು ಮಂದಿಗೆ ಆಶ್ರಯ ನೀಡಲು ಸಿದ್ಧವಿರುವುದಾಗಿ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ರಶೀದ್ ಹಾಜಿ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.












Click it and Unblock the Notifications