ಬೆಂಗಳೂರು ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆನಂದ್
ಮಂಗಳೂರು, ನವೆಂಬರ್ 09 : ರಾಜ್ಯ ಬಿಜೆಪಿ ಸಹ ವಕ್ತಾರ ಎ.ಎಚ್. ಆನಂದ್ ಅವರಿಗೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಲು ಬಿಜೆಪಿ ತೀರ್ಮಾನಿಸಿದೆ.
ಮಂಗಳೂರಿನಲ್ಲಿ ಗುರುವಾರ (ನ.9)ರಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಆನಂದ್ ಅವರಿಗೆ ಟಿಕೆಟ್ ನೀಡಲು ಪಕ್ಷದ ಮುಖಂಡರು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ.

ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರಾದ ಡಿ.ವಿ. ಸದಾನಂದಗೌಡ, ಅನಂತಕುಮಾರ್, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಪ್ರಹ್ಲಾದ್ ಜೋಶಿ, ನಳೀನ್ ಕುಮಾರ್ ಕಟೀಲ್, ಆರ್. ಅಶೋಕ್ ಸೇರಿದಂತೆ ಮತ್ತಿರರ ಸಭೆಯಲ್ಲಿ ತೀರ್ಮಾಣ ಕೈಗೊಳ್ಳಲಾಯಿತು.
ಬೆಂಗಳೂರು ಪದವೀಧರರ ಕ್ಷೇತ್ರದಿಂದ ಹಲವು ಹೆಸರು ಕೇಳಿ ಬರುತ್ತಿದ್ದವು. ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ರಾಮಚಂದ್ರೇಗೌಡ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರದಿಂದ ಆಕಾಂಕ್ಷಿಗಳ ಪಟ್ಟಿ ಸಾಕಷ್ಟಿತ್ತು. ರಾಮಚಂದ್ರೇಗೌಡ ಅವರ ಪುತ್ರ ಸಪ್ತಗಿರಿ ಗೌಡ, ಉಪನ್ಯಾಸಕ ಜಯಶಂಕರ್ ಇನ್ನಿತರೆ ಹೆಸರುಗಳು ಚಾಲ್ತಿಯಲ್ಲಿದ್ದವು.
ಪಕ್ಷದ ಸಿದ್ಧಾಂತದಂತೆ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕೆಂದು ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ಆನಂದ್ ಅವರಿಗೆ ಟಿಕೆಟ್ ನೀಡಲು ಮುಖಂಡರು ಒಮ್ಮತದ ನಿರ್ಧಾರ ಮಾಡಿದ್ದಾರೆ. ಎಲ್ಲಾ ಸಾಧಕ ಬಾಧಕಗಳನ್ನು ಗಮನಿಸಿದ ಪಕ್ಷದ ವರಿಷ್ಠರು ಕಳುಹಿಸಿಕೊಡುವ ಪಟ್ಟಿಯನ್ನು ಕೇಂದ್ರ ಬಿಜೆಪಿ ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಿದೆ.












Click it and Unblock the Notifications