ದಕ್ಷಿಣ ಕನ್ನಡ-ಕೇರಳ ಗಡಿ ಚೆಕ್ಪೋಸ್ಟ್ಗೆ ಎಡಿಜಿಪಿ ಭೇಟಿ
ಮಂಗಳೂರು, ಆಗಸ್ಟ್ 03; ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕ-ಕೇರಳ ಗಡಿಯಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. 72 ಗಂಟೆಯೊಳಗಿನ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ಹೊಂದಿರುವವರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಅನುಮತಿ ನೀಡಲಾಗಿದೆ.
ಕರ್ನಾಟಕದ ಸರ್ಕಾರದ ತೀರ್ಮಾನಕ್ಕೆ ಕೇರಳದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಕನ್ನಡ-ಕೇರಳ ಗಡಿಯಲ್ಲಿ ಸೋಮವಾರ ಕೇರಳದವರು ರಾಜ್ಯ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಮಂಗಳವಾರ ಸಹ ಪ್ರತಿಭಟನೆಯನ್ನು ಮಾಡಲಾಗಿದೆ.
ಕರ್ನಾಟಕ- ಕೇರಳ ಗಡಿ ಈಗ ಭಾರತ- ಪಾಕಿಸ್ತಾನ ಗಡಿಯಂತಾಗಿದೆ; ಕೇರಳಿಗರ ಆಕ್ರೋಶ
ಮಂಗಳವಾರ ಎಡಿಜಿಪಿ ಪ್ರತಾಪ್ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿಭಾಗದಲ್ಲಿರುವ ಸಾಲೆತ್ತೂರು, ತಲಪಾಡಿ ಚೆಕ್ ಪೋಸ್ಟ್ಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗಡಿಯಲ್ಲಿನ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು.
ವಯನಾಡಿನ ವೈತಿರಿ ಸಂಪೂರ್ಣ ಲಸಿಕೆ ನೀಡಿರುವ ಕೇರಳ ರಾಜ್ಯದ ಮೊದಲ ಪ್ರವಾಸಿ ತಾಣ
ಅಧಿಕಾರಿಗಳು ಕೇರಳದಿಂದ ಆಗಮಿಸುವವರ ತಪಾಸಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳು. ಕೋವಿಡ್ ಮಾರ್ಗಸೂಚಿ ಅನುಷ್ಟಾನ ಮಾಡುತ್ತಿರುವ ಬಗ್ಗೆ ಎಡಿಜಿಪಿ ಪ್ರತಾಪ್ ರೆಡ್ಡಿಗೆ ವಿವರಣೆಗಳನ್ನು ನೀಡಿದರು.
ಕೇರಳ, ತಮಿಳುನಾಡಲ್ಲಿ ಕೊರೊನಾ ಸೋಂಕು ಹೆಚ್ಚಳ: ಚಾಮರಾಜನಗರದಲ್ಲಿ ಕಟ್ಟುನಿಟ್ಟಿನ ತಪಾಸಣೆ
ಕೋವಿಡ್ ನೆಗೆಟಿವ್ ವರದಿ ಇಲ್ಲದ ಯಾರನ್ನೂ ಸಹ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಪ್ರತಾಪ್ ರೆಡ್ಡಿ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಗಡಿಯಲ್ಲಿನ ಹೆಚ್ಚುವರಿ ಪೊಲೀಸ್ ಭದ್ರತೆ, ತಪಾಸಣೆ ಬಗ್ಗೆ ಮಾಹಿತಿಯನ್ನು ನೀಡಿದರು.
ಮಂಗಳವಾರದಿಂದ ತಲಪಾಡಿ ಗಡಿ ಮೂಲಕ ತುರ್ತು ವಾಹನ ಹೊರತುಪಡಿಸಿ ಇತರೆ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸೋಮವಾರ ಎಲ್ಡಿಎಫ್ ಪ್ರತಿಭಟನೆ ನಡೆಸಿತ್ತು, ಇಂದು ಸಂಯುಕ್ತ ಜನತಾದಳ ಸದಸ್ಯರು ಪ್ರತಿಭಟನೆ ನಡೆಸಿದರು.
ದಕ್ಷಿಣ ಕನ್ನಡ-ಕೇರಳ ಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಕೇರಳದಿಂದ ಆಗಮಿಸುವ ಪ್ರತಿ ವಾಹನವನ್ನು ತಪಾಸಣೆ ಮಾಡಿ ಕೋವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ಅಗತ್ಯ ಸೇವೆಗಳನ್ನು ಒದಗಿಸುವ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿತ್ತು. ಸಾರ್ವಜನಿಕ ಸಾರಿಗೆಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿತ್ತು.
ಸೋಮವಾರದ ವರದಿಯಂತೆ ಕೇರಳದಲ್ಲಿ 24 ಗಂಟೆಯಲ್ಲಿ 13,984 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ, 118 ಜನರು ಮೃತಪಟ್ಟಿದ್ದಾರೆ. ಭಾನುವಾರ ರಾಜ್ಯದಲ್ಲಿ 20 ಸಾವಿರ ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು.
ಕೇರಳದ ಕೋವಿಡ್ ಪರಿಸ್ಥಿತಿ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿದ್ದಾರೆ, "ಕೋವಿಡ್ ಪರಿಸ್ಥಿತಿ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ವೈದ್ಯಕೀಯ ಆಮ್ಲಜನಕಕ್ಕಾಗಿ ಹೆಚ್ಚಿನ ಬೇಡಿಕೆ ಇಲ್ಲ. ಸರ್ಕಾರ ಕೋವಿಡ್ ಲಸಿಕೆ ನೀಡುವ ವಿಚಾರಕ್ಕೆ ಹೆಚ್ಚು ಒತ್ತು ನೀಡುತ್ತಿದೆ" ಎಂದು ಹೇಳಿದ್ದಾರೆ.
ರೈಲು ನಿಲ್ದಾಣದಲ್ಲಿಯೂ ಪರೀಕ್ಷೆ; ಜಿಲ್ಲಾಡಳಿತದ ಸೂಚನೆಯಂತೆ ಕೇರಳದಿಂದ ಆಗಮಿಸುವ ಪ್ರಯಾಣಿಕರಿಗೆ ರೈಲು ನಿಲ್ದಾಣದಲ್ಲಿಯೂ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿಯಲ್ಲಿದೆ. ಸೋಮವಾರ ಜಿಲ್ಲೆಯಲ್ಲಿ 219 ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2948. ಒಟ್ಟು ಪ್ರಕರಣಗಳ ಸಂಖ್ಯೆ 100999. ಇದುವರೆಗೂ ಜಿಲ್ಲೆಯಲ್ಲಿ 96617 ಜನರು ಗುಣಮುಖಗೊಂಡಿದ್ದಾರೆ. 1431 ಜನರು ಮೃತಪಟ್ಟಿದ್ದಾರೆ.