ಅದಾನಿ ಗ್ರೂಪ್ಗೆ ಮಂಗಳೂರು ವಿಮಾನ ನಿಲ್ದಾಣ: ವಾರಕ್ಕೊಂದು ಪ್ರತಿಭಟನೆ ಎಂದ ಕಾಂಗ್ರೆಸ್
ಮಂಗಳೂರು, ನವೆಂಬರ್ 12: ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಗ್ರೂಪ್ಗೆ ಹಸ್ತಾಂತರಿಸಲಾಗಿದ್ದು, ಇದಾದ ಹಲವು ದಿನಗಳ ನಂತರ ಇದೀಗ ಕಾಂಗ್ರೆಸ್ ಮುಖಂಡರಿಗೆ ಜ್ಞಾನೋದಯವಾದಂತಿದೆ.
ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಮಾನ ನಿಲ್ದಾಣ ಅದಾನಿ ಸಂಸ್ಥೆಗೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣ ಅದಾನಿ ಗ್ರೂಪ್ಗೆ ಹಸ್ತಾಂತರ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ತೊಂದರೆ ನೀಡುತ್ತಿದ್ದಾರೆ ಎಂಬುವುದು ಇಡೀ ರಾಷ್ಟ್ರಕ್ಕೆ ಗೊತ್ತಾಗಬೇಕಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು ಎಂದರು.
ಇನ್ನು ಹಲವು ರೀತಿಯಲ್ಲಿ ಮಂಗಳೂರಿನ ಅಭಿವೃದ್ಧಿಗೆ ಕಾರಣರಾದವರನ್ನು ಮೂಲೆಗುಂಪು ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣವನ್ನು ಯಾರನ್ನೂ ಕೂಡ ಕೇಳದೆ ಅದಾನಿ ಸಂಸ್ಥೆಗೆ ನೀಡಲಾಗಿದ್ದು, ಅದಾನಿ ಹೆಸರಿನಡಿಯಲ್ಲೇ ಇದೀಗ ವಿಮಾನ ನಿಲ್ದಾಣ ನಿರ್ವಹಣೆಗೊಳಪಟ್ಟಿದೆ.
ಮಂಗಳೂರಿಗೆ ಯಾವುದೇ ಕೊಡುಗೆ ನೀಡದೆ ಇರುವ ಗೌತಮ್ ಅದಾನಿಗೆ ಮಂಗಳೂರು ವಿಮಾನ ನಿಲ್ದಾಣ ನೀಡಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರಾವಳಿ ಭಾಗದ ಅನೇಕ ನಾಯಕರ ಸತತ ಪ್ರಯತ್ನದಿಂದಾಗಿ ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣವಾಗಿ ಅಭಿವೃದ್ಧಿಗೊಂಡಿದೆ. ಆದರೆ, ಇದೀಗ ಅದಾನಿ ಸಂಸ್ಥೆಗೆ ನೀಡಿದ ಸಂದರ್ಭದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಜಿಲ್ಲೆಯ ಜನ ನಾಯಕರು ಮೌನವಾಗಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಖಾಸಗೀಕರಣ ವಿರೋಧಿಸಿ ಈಗಾಗಲೇ ಪ್ರತಿಭಟನೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿವಾರದಲ್ಲಿ ಒಂದು ದಿನ ಕೆಂಜಾರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಭಯಚಂದ್ರ ಜೈನ್ ತಿಳಿಸಿದ್ದಾರೆ.