2017 ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆ
ಮಂಗಳೂರು, ಅಕ್ಟೋಬರ್ 25 : ಕನ್ನಡ ನಾಡು ನುಡಿ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2017 ಇದೇ ಡಿಸೆಂಬರ್ 1 ರಿಂದ 3 ವರೆಗೆ ಮೂರು ದಿನಗಳ ಕಾಲ ಮೂಡುಬಿದಿರೆಯಲ್ಲಿ ನಡೆಯಲಿದೆ.
ಚಿತ್ರಗಳು : ಮೂಡುಬಿದಿರೆಯಲ್ಲಿ ಆಳ್ವಾಸ್ ನುಡಿಸಿರಿಗೆ ಚಾಲನೆ
ಈ ಕುರಿತು ಮಾಹಿತಿ ನೀಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವಾ, ಈ ಬಾರಿಯ 14ನೇ ಆಳ್ವಾಸ್ ನುಡಿಸಿರಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಸಮ್ಮೇಳನವನ್ನು ಹಿರಿಯ ಸಾಹಿತಿ ಡಾ ಸಿ ಎನ್ ರಾಮಚಂದ್ರನ್ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜಿನ ಆನಂದ್ ಆಳ್ವ ಸಭಾಂಗಣದಲ್ಲಿ ಈ ಬಾರಿಯ 14ನೇ ಆಳ್ವಾಸ್ ನುಡಿಸಿರಿ ಸಮ್ಮೇಳನ ಆಯೋಜಿಸಲಾಗಿದೆ.
"ಕರ್ನಾಟಕದ ಬಹುತ್ವದ ನೆಲೆಗಳು" ಪರಿಕಲ್ಪನೆಯಡಿ ಈ ಬಾರಿಯ ಸಮ್ಮೇಳನ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ, ಮಾಧ್ಯಮ ,ಶಿಕ್ಷಣ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಗಂಭೀರ ಚರ್ಚೆಗೆ ಈ ಸಮ್ಮೇಳನ ವೇದಿಕೆಯಾಗಲಿದೆ.
ಈ ಬಾರಿ ರಾಜ್ಯ ಮೂಲೆ ಮೂಲೆಗಳಿಂದ ಮಾತ್ರವಲ್ಲದೇ ಇತರ ರಾಜ್ಯಗಳಿಂದಲೂ ಸಾಹಿತ್ಯಾಸಕ್ತರು ನುಡಿಸಿರಿ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೋಹನ್ ಆಳ್ವಾ ವಿಶ್ವಾಸ ವ್ಯಕ್ತಪಡಿಸಿದರು.