Praveen Nettaru Murder: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮತ್ತೋರ್ವ ಪ್ರಮುಖ ಆರೋಪಿ ಬಂಧನ
ಮಂಗಳೂರು, ಮೇ 10: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ, ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಹಾಸನ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಮೂವರನ್ನು ಎನ್ಐಎ ತಂಡ ವಶಕ್ಕೆ ಪಡೆದಿದೆ. ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಸ್ತಾಫ ಪೈಚಾರ್ (43) ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ. ಈತನ ಬಗ್ಗೆ ವಾಟೆಂಟ್ ನೋಟಿಸ್ ಕೂಡ ಹೊರಡಿಸಲಾಗಿತ್ತು.

ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಮುಸ್ತಾಫ ಪೈಚಾರ್ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ನ ಸಿರಾಜ್ ಬಳಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಇಲಿಯಾಸ್ ಕೂಡ ಇವರ ಜೊತೆ ಕೆಲಸ ಮಾಡುತ್ತಿದ್ದ, ಸದ್ಯ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ನನ್ನು ಸಹ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ರವಾನಿಸಲಾಗಿದೆ.
ಪ್ರಕರಣದ ಹಿನ್ನೆಲೆ ಏನು..?
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಕೋಳಿ ಅಂಗಡಿ ಮುಚ್ಚಿ ತೆರಳುವ ವೇಳೆ ಆತನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಹಿಂದೂ ಮುಖಂಡನ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಗಂಭೀರತೆ ಅರಿತ ಅಂದಿನ ಸರ್ಕಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿತ್ತು. ತನಿಖೆ ಮುಂದುವರಿದಿದ್ದು ಪ್ರಕರಣದ ನಾಲ್ಕನೇ ಆರೋಪಿಯನ್ನು ಬಂಧಿಸಲಾಗಿದೆ.












Click it and Unblock the Notifications