ಪ್ರತಿಭಟನೆ ಹಿಂಪಡೆದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ
ಮಂಗಳೂರು, ನವೆಂಬರ್. 02:ಸುರತ್ಕಲ್ ನಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ಅನ್ನು ಮುಚ್ಚುವಂತೆ ಆಗ್ರಹಿಸಿ ಸುರತ್ಕಲ್ ನಲ್ಲಿ ನಡೆಯುತ್ತಿದ್ದ ಅನಿರ್ಧಿಷ್ಟಾವಧಿ ಧರಣಿಯನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ.
ನಿನ್ನೆ (ನ.1) ರಾತ್ರಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ, ನ್ಯಾಯ ದೊರಕಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.
ಮಂಗಳೂರು ನಗರವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ 45 ಕಿಮೀ ಅಂತರದಲ್ಲಿ ಮೂರು ಕಡೆ ಸುಂಕ ವಸೂಲಿ ಮಾಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ 'ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ' ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿತ್ತು.

ಉಡುಪಿ ಬಳಿಯ ಹೆಜಮಾಡಿ, ಸುರತ್ಕಲ್ ಮತ್ತು ಕೇರಳ ಗಡಿಭಾಗ ತಲಪಾಡಿ ಹೀಗೆ ಕೇವಲ 45 ಕಿಮೀ ಅಂತರದಲ್ಲಿ ಮೂರು ಕಡೆ ಸುಂಕ ವಸೂಲಿ ಮಾಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಸತತ 11 ದಿನಗಳಿಂದ ಅಹೋರಾತ್ರಿ ಧರಣಿ ಮುಂದುವರೆದಿತ್ತು.
ವಿವಿಧ ಸಂಘಟನೆಗಳು, ವಿವಿಧ ಪಕ್ಷಗಳ ಮುಖಂಡರು ಟೋಲ್ ಗೇಟ್ ವಿರೋಧಿ ಹೋರಾಟಕ್ಕೆ ಬೆಂಬಲಿಸಿದ್ದರು. ಈ ಹೋರಾಟ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿತ್ತು.
ಇದೆಲ್ಲದರ ನಡುವೆ ಸಚಿವ ಖಾದರ್ ಪ್ರತಿಭಟನಾಕಾರರ ಅಳಲನ್ನು ಆಲಿಸಿ ಕೂಡಲೇ ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತಂದು ಕೇಂದ್ರ ಸರಕಾರಕ್ಕೆ ಒತ್ತಡ ತರುವ ಕೆಲಸ ಮಾಡುತ್ತೇನೆಂಬ ಭರವಸೆ ನೀಡಿದ್ದಾರೆ.
ನ್ಯಾಯ ನಿರಾಕರಣೆಯಾದರೆ ಮುಂದೆ ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ಖಾದರ್ ತಿಳಿಸಿದ್ದು, ಅಲ್ಲಿಯವರೆಗೆ ಧರಣಿ ಹಿಂಪಡೆಯಬೇಕು ಎಂದು ಕೋರಿದ್ದಾರೆ. ಆದ್ದರಿಂದ ತಾತ್ಕಾಲಿಕವಾಗಿ ಧರಣಿ ಕೈಬಿಡಲು ಹೋರಾಟ ಸಮಿತಿ ನಿರ್ಧರಿಸಿದೆ.












Click it and Unblock the Notifications