ಕಾವ್ಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ
ಮಂಗಳೂರು, ಆಗಸ್ಟ್ 20: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದಲ್ಲಿ ತನಿಖಾಧಿಕಾರಿಗಳ ವಿಳಂಬ ನೀತಿ ಖಂಡಿಸಿ ಹಾಗೂ ಕಾವ್ಯ ಸಾವಿನ ಪ್ರಕರಣದಲ್ಲಿ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹ ನಡೆಸಲು ಸರ್ವ ಕಾಲೇಜು ವಿದ್ಯಾರ್ಥಿ ಸಂಘ ನಿರ್ಧರಿಸಿದೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಾಶ್ವತ್ ಕೊಟ್ಟಾರಿ, "ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ," ಎಂದು ದೂರಿದರು.
ಕಾವ್ಯಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಲವಾರು ಬಾರಿ ಪ್ರತಿಭಟನೆ ಹೋರಾಟ ನಡೆಸಲಾಗಿದೆ. ಆದರೆ ಕಾವ್ಯಾಳ ಸಾವಿನ ಪ್ರಕರಣದ ಸಂಶಯಗಳಿಗೆ ಈವರೆಗೆ ಉತ್ತರ ದೊರಕಿಲ್ಲ. ತನಿಖೆ ನಡೆಸುತ್ತಿರುವ ಪೊಲೀಸರು ಕಾವ್ಯಾಳ ಪೋಷಕರಿಗಾಗಲೀ ಅಥವಾ ಸಾರ್ವಜನಿಕರಿಗಾಗಲೀ ಈವರೆಗೆ ಮಾಹಿತಿ ನೀಡದಿರುವುದು ಅಚ್ಚರಿ ತಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು .
ಕಾವ್ಯಾಳ ಕುಟುಂಬಕ್ಕೆ ಪರಿಹಾರ ನೀಡುವ ಬೇಡಿಕೆ ಇಟ್ಟಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಈವರೆಗೆ ಸ್ಪಂದಿಸಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು .
ಈ ಹಿನ್ನೆಲೆಯಲ್ಲಿ ಕಾವ್ಯ ಸಾವಿನ ಪ್ರಕರಣಕ್ಕೆ ತನಿಖಾಧಿಕಾರಿಗಳ ವಿಳಂಬ ನೀತಿ ಹಾಗೂ ಕಾವ್ಯ ಸಾವಿನ ನ್ಯಾಯಕ್ಕಾಗಿ ಒತ್ತಾಯಿಸಿ ಇದೇ ಬರುವ ಆಗಸ್ಟ್ 26 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ತಿಳಿಸಿದರು.