ಬ್ಯಾರೀಸ್ ಕಲ್ಚರಲ್ ಫೋರಂನಿಂದ ಸಹಾಯಧನ ವಿತರಣೆ
ಮಂಗಳೂರು, ಆಗಸ್ಟ್ 14: 547 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 52 ಮಂದಿ ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ 21 ಮಂದಿಗೆ ಗಾಲಿ ಕುರ್ಚಿಗಳ ವಿತರಣಾ ಕಾರ್ಯಕ್ರಮ ಭಾನುವಾರ ಮಂಗಳೂರಿನ ಲೊಯೋಲಾ ಸಭಾಂಗಣದಲ್ಲಿ ನಡೆಯಿತು. ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ಯುಎಇ ಮತ್ತು ಬ್ಯಾರೀಸ್ ಕಲ್ಚರಲ್ ಫೋರಂ ಟ್ರಸ್ಟ್ ಮಂಗಳೂರು ವತಿಯಿಂದ ಈ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ, "ದೇಶದ ಭವಿಷ್ಯವು ಯುವಕರ ಮೇಲಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸದೆ ರೂಪಿಸಲಾಗುವ ಯಾವುದೇ ಚಿಂತನೆಗಳು, ಯೋಜನೆಗಳಿಂದ ದೇಶದ ಭವಿಷ್ಯ ಉಜ್ವಲವಾಗದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳಿಸಿಕೊಂಡು ಮೌಲ್ಯ, ಮಾಹಿತಿ ಮತ್ತು ಸ್ಪಷ್ಟ ಗುರಿಯೊಂದಿಗೆ ಮುನ್ನಡೆಯುತ್ತಾ ಯಶಸ್ಸು ಸಾಧಿಸಬೇಕು," ಎಂದು ಶುಭ ಹಾರೈಸಿದರು.
"ವಿದೇಶಗಳಲ್ಲಿ ದುಡಿಯುತ್ತಿರುವ ಬಿಸಿಎಫ್ನ ಸದಸ್ಯರು ತಮ್ಮ ಬೆವರಿನ ಫಲದ ಒಂದಂಶವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮೀಸಲಿಟ್ಟಿರುವುದು ಶ್ಲಾಘನೀಯ ಕಾರ್ಯ. ಇಂತಹ ಸಹಾಯವನ್ನು ಪಡೆದಿರುವ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಂಡು ಇತರ ಬಡವರಿಗೂ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು," ಎಂದು ಅವರು ಹೇಳಿದರು.
ಸಂಸ್ಥೆಯ ಸಾಮಾಜಿಕ ಕಳಕಳಿ ಶ್ಲಾಘನೀಯ
ಸಚಿವ ಯು.ಟಿ.ಖಾದರ್ ಮಾತನಾಡಿ, "ಉತ್ತಮ ಅಂಕಗಳನ್ನು ಗಳಿಸಿದ ಉಭಯ ಜಿಲ್ಲೆಗಳ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ವಿತರಿಸುವ ಮೂಲಕ ಬಿಸಿಎಫ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಸಂಸ್ಥೆಯ ಸಾಮಾಜಿಕ ಕಳಕಳಿಯನ್ನು ತೋರಿಸಿದೆ. ಇಂದು ಬಿಸಿಎಫ್ನಿಂದ ಸಹಾಯವನ್ನು ಪಡೆದಿರುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆಗೆ ಗಮನಹರಿಸಬೇಕು. ಈ ಮೂಲಕ ನೆಮ್ಮದಿಯ ಬದುಕು ಕಳೆಯುವಂತಾಗಬೇಕು," ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಿಸಿಎಫ್ ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯ
ಎನ್ಎಂಸಿ ಗ್ರೂಪ್ನ ಅಧ್ಯಕ್ಷ ಡಾ.ಬಿ.ಆರ್.ಶೆಟ್ಟಿ ಮಾತನಾಡಿ, "ಕಳೆದ ಹಲವು ವರ್ಷಗಳಿಂದ ಬಡವರ ಕಾಳಜಿಯೊಂದಿಗೆ ಬಿಸಿಎಫ್ ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯ. ಆರ್ಥಿಕವಾಗಿ ಹಿಂದುಳಿದ ಜೋಡಿಗಳಿಗೆ ಮದುವೆ, ಬಡ ಕುಟುಂಬಕ್ಕೆ ಶೌಚಾಲಯದ ನಿರ್ಮಾಣ ಸಹಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ವಿತರಿಸುವ ಮೂಲಕ ಸಂಸ್ಥೆಯು ಸಾಮಾಜಿಕ ಕಳಕಳಿಯನ್ನು ಹೊಂದಿದೆ," ಎಂದರು.
ಶಿಕ್ಷಣವನ್ನು ಮುಂದುವರಿಸಲು ಸಹಾಯ
ಬಿಸಿಎಫ್ ಅಧ್ಯಕ್ಷ ಡಾ.ಬಿ.ಕೆ.ಯೂಸುಫ್ ಮಾತನಾಡಿ, "ಕಳೆದ 16 ವರ್ಷಗಳಿಂದ ಬಿಸಿಎಫ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿ ವೇತನವು ಕೇವಲ ಹೆಚ್ಚು ಅಂಕಗಳಿಗೆ ಮಾತ್ರ ಸೀಮಿತವಾಗದೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಕೂಡ ಗುರುತಿಸಿ ಅವರು ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ವಿದ್ಯಾರ್ಥಿವೇತನವನ್ನು ವಿತರಿಸಲಾಗಿದೆ," ಎಂದರು.
16 ವರ್ಷಗಳಿಂದ ಸಮಾಜ ಸೇವೆ
ಬಿಸಿಎಫ್ ಉಪಾಧ್ಯಕ್ಷ ಹಾಗೂ ಸ್ಕಾಲರ್ಶಿಪ್ ಸಮಿತಿಯ ಅಧ್ಯಕ್ಷ ಎಂ.ಇ.ಮೂಳೂರು ಅವರು ಕಳೆದ 16 ವರ್ಷಗಳಿಂದ ಸಂಸ್ಥೆಯು ಕೈಗೊಂಡ ಸಾಮಾಜಿಕ ಕಾರ್ಯಗಳ ಬಗ್ಗೆ ವಿವರಿಸಿದರು.
ಹಲವು ಗಣ್ಯರ ಉಪಸ್ಥಿತಿ
ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್, ಶಾಸಕರಾದ ಮೊಯ್ದಿನ್ ಬಾವ, ಕರ್ನಾಟಕ ಎನ್.ಆರ್.ಐ. ಫೋರಂನ ಉಪಾಧ್ಯಕ್ಷೆ ಆರತಿ ಕೃಷ್ಣ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ಎಕ್ಸ್ಪರ್ಟೈಸ್ ಗ್ರೂಪ್ನ ಅಧ್ಯಕ್ಷ ಕೆ.ಎಸ್.ಸೈಯದ್ ಕರ್ನಿರೆ, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಮೊದಲಾದವರು ಉಪಸ್ಥಿತರಿದ್ದರು.