ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರದ ದಾಂಗುಡಿಗೆ ಇಬ್ಬರು ಬಲಿ
ಮಂಗಳೂರು, ಜೂನ್ 16 : ಬೆಳ್ತಂಗಡಿ ತಾಲೂಕಿನಾದ್ಯಂತ ಮಾರಣಾಂತಿಕವಾದ ಡೆಂಗ್ಯೂ ಜ್ವರ ಹರಡುತ್ತಿದೆ. ಹಲವಾರು ಜನರು ಜ್ವರ ಪೀಡಿತರಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಇಬ್ಬರು ಈಗಾಗಲೇ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದು, ಜನರ ಆತಂಕ ಹೆಚ್ಚಲು ಕಾರಣವಾಗಿದೆ.
ತಾಲೂಕಿನಲ್ಲಿ ಮೇ ಅಂತ್ಯದ ವರೆಗೆ 35 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದವು. ಸದ್ಯ, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ 66 ಮಂದಿ ಜ್ವರ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, 22 ಮಂದಿಗೆ ಡೆಂಗ್ಯೂ ಇರುವುದು ಖಚಿತವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಲೆಕ್ಕವನ್ನು ಯಾರೂ ಇಟ್ಟಿಲ್ಲ. [ಡೆಂಗ್ಯೂ ತಡೆಗೆ ಯಾವ ಮುಂಜಾಗ್ರತಾ ಕ್ರಮ ಬೇಕು?]

ತಾಲೂಕಿನ ನಾವೂರು ಪ್ರದೇಶದಲ್ಲಿ ಅತ್ಯಂತ ಹೆಚ್ಚಾಗಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಈಗಾಗಲೆ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ಶುಚಿತ್ವ ಹಾಗೂ ಫಾಗಿಂಗ್ ಕಾರ್ಯ ಕೈಗೊಳ್ಳಲಾಗಿದೆ. ಹೆಚ್ಚು ಪ್ರಕರಣ ದಾಖಲಾಗಿರುವ ವೇಣೂರು, ಹತ್ಯಡ್ಕ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. [ಡೆಂಗ್ಯೂ ಜ್ವರ ಹೆಚ್ಚಾಗಲು ರಬ್ಬರ್ ಬೆಳೆಗಾರರು ಕಾರಣ?]
ಮಳೆಗಾಲ ಆರಂಭಗೊಂಡು 15 ದಿನಗಳು ಕಳೆದಿದ್ದರೂ ಇನ್ನೂ ಸರಿಯಾಗಿ ಮಳೆ ಬಾರದಿರುವುದು ಸೊಳ್ಳೆಗಳ ಬೆಳವಣಿಗೆಗೆ ಪೂರಕವಾಗಿದೆ, ಇದರಿಂದಾಗಿ ಸಾಂಕ್ರಮಿಕ ರೋಗಗಳು ಅತ್ಯಂತ ತೀವ್ರವಾಗಿ ಹರಡುತ್ತಿವೆ. ಈ ಹಿನ್ನಲೆಯಲ್ಲಿ ಇನ್ನೂ ಕೆಲ ದಿನಗಳ ಕಾಲ ಈ ರೋಗಗಳು ನಿಯಂತ್ರಣಕ್ಕೆ ಬರುವುದು ಕಷ್ಟ ಎನ್ನುವುದು ತಜ್ಞರ ಅಭಿಪ್ರಾಯ.
ಇಬ್ಬರು ಮೂವರು ಡೆಂಗ್ಯೂ ಪೀಡಿತರು ಇರುವ ಮನೆಗಳು ಸಾಕಷ್ಟಿವೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಪ್ರತಿನಿತ್ಯ ಲಭ್ಯವಿಲ್ಲದ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶಗಳ ರೋಗಿಗಳು ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾಗಿದೆ.












Click it and Unblock the Notifications