ಆಡಿಯೋ ವೈರಲ್:ನಳಿನ್ ಗೆ ಟಿಕೆಟ್ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ!
ಮಂಗಳೂರು, ಮಾರ್ಚ್ 17:ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಎದೆಬಡಿತ ಹೆಚ್ಚಾಗಿದೆ.
ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊನೆ ಕ್ಷಣದಲ್ಲಿ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ನಳಿನ್ ಕುಮಾರ್ ಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಕ್ಷದ ಕಾರ್ಯಕರ್ತನೊಬ್ಬ ಬೆದರಿಕೆ ಹಾಕಿರುವ ಘಟನೆ ಬಿಜೆಪಿ ಪಾಳಯದಲ್ಲಿ ಗೊಂದಲ ಸೃಷ್ಟಿಸಿದೆ.
ದಕ್ಷಿಣ ಕನ್ನಡ ಬಿಜೆಪಿ ಶಕ್ತಿಕೇಂದ್ರ ಕಾರ್ಯಕರ್ತರ ಸಮಾವೇಶಕ್ಕೆ ಬರುವಂತೆ ಬಿಜೆಪಿ ಕಾರ್ಯಕರ್ತನಿಗೆ ದೂರವಾಣಿ ಕರೆ ಮಾಡಿದಾಗ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದು, ತುಳುವಿನಲ್ಲಿರುವ ಈ ಆಡಿಯೋ ಈಗ ಭಾರೀ ವೈರಲ್ ಆಗಿದೆ.

"ಈ ಬಾರಿ ಯಾವುದೇ ಕಾರಣಕ್ಕೂ ನಳಿನ್ ಕುಮಾರ್ ಕಟೀಲ್ ಪರವಾಗಿ ಮತ ಯಾಚನೆಗೆ ಬರುವುದಿಲ್ಲ. ಗಲಾಟೆ, ಕೇಸ್ ಗಳಾದಾಗ ಹತ್ತಿರ ಸುಳಿಯದ ನಳಿನ್ ನಮಗೆ ಯಾಕೆ ಬೇಕು? ಸ್ಟೇಶನ್ನಿಗೂ ಬರಲಾಗದ ವ್ಯಕ್ತಿ ಮತ್ತೆ ಆಯ್ಕೆಯಾಗಬಾರದು" ಎಂದು ಬಿಜೆಪಿ ಕಾರ್ಯಕರ್ತ ಎಂದು ಹೇಳಲಾಗುವ ವ್ಯಕ್ತಿ ತುಳು ಭಾಷೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಬಾರಿ ಟಿಕೆಟ್ ನೀಡಿದರೆ ಬಿಜೆಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ತೇನೆ ಎನ್ನುವ ಬೆದರಿಕೆ ಒಡ್ಡಿದ್ದಾನೆ.
ಸಂಭಾಷಣೆ ನಡೆಸಿರುವ ಇಬ್ಬರೂ, ಪುತ್ತೂರಿನ ಬಿಜೆಪಿ ಕಾರ್ಯಕರ್ತರಾಗಿದ್ದು, ಈ ಬಾರಿ ನಳಿನ್ ಪರ ಕೆಲಸ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ತಮ್ಮ ಒಟ್ಟಿಗಿರುವ ಹುಡುಗರನ್ನೂ ಕಳಿಸಿಕೊಡಲ್ಲ ಎಂದು ಹೇಳುತ್ತಾರೆ.
ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗದ ಬಿಜೆಪಿ ಕಾರ್ಯಕರ್ತರು ನಳಿನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಳಿನ್ ಬದಲಾವಣೆ ಬಯಸಿ ಪೋಸ್ಟ್ ಸಹ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸರ್ವೆಯಲ್ಲೂ ನಳಿನ್ ಬಗ್ಗೆ ನೆಗೆಟಿವ್ ಬಂದಿದೆ ಎಂದು ಹೇಳಲಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾಗಲಿದ್ದಾರಾ ? ಎಂಬುದನ್ನು ಕಾದು ನೋಡಬೇಕಾಗಿದೆ.












Click it and Unblock the Notifications