ಮಂಗಳೂರು; ನವೆಂಬರ್ 5ಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಣಿ
ಮಂಗಳೂರು, ನವೆಂಬರ್ 02 : ಮಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಸುಮಾರು ಎರಡು ದಶಕಗಳ ಬಳಿಕ ನಗರದಲ್ಲಿ ನಡೆಯಲಿರುವ ಕಾರ್ಯಕಾರಣಿಯನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ನವೆಂಬರ್ 5ರಂದು ಮಂಗಳೂರಿನ ಟಿ. ವಿ. ರಮಣ್ ಪೈ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಣಿ ಮತ್ತು ಕೋರ್ ಕಮಿಟಿ ಸಭೆ ನಡೆಯಲಿದೆ. ಯಡಿಯೂರಪ್ಪ ಬೆಳಗ್ಗೆ 10 ಗಂಟೆಗೆ ಕಾರ್ಯಕಾರಣಿ ಉದ್ಘಾಟನೆ ಮಾಡಲಿದ್ದಾರೆ.
ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ತನಕ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಪಕ್ಷದ 120 ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕಾರಣಿ ಅಧ್ಯಕ್ಷತೆ ವಹಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ಜಿಲ್ಲೆಯಲ್ಲಿಯೇ ಕಾರ್ಯಕಾರಣಿ ನಡೆಯುತ್ತಿದೆ. ಸಮಾರೋಪ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಪಾಲ್ಗೊಳ್ಳಲಿದ್ದಾರೆ.
2 ದಶಕದ ಬಳಿಕ ಕಾರ್ಯಕಾರಣಿ : ಮಂಗಳೂರು ನಗರದಲ್ಲಿ ಎರಡು ದಶಕಗಳ ಬಳಿಕ ಬಿಜೆಪಿ ಕಾರ್ಯಕಾರಣಿ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲಿ ಕಾರ್ಯಕಾರಣಿ ಯಶಸ್ವಿಗೊಳಿಸಲು ಬಿಜೆಪಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
ಕಾರ್ಯಕಾರಣಿಗಾಗಿ 9 ಮಂಡಲಗಳನ್ನು ಒಳಗೊಂಡು 16 ವಿಭಾಗವನ್ನು ಮಾಡಲಾಗಿದೆ. ಪಕ್ಷದ 7 ಶಾಸಕರು, ಪಕ್ಷದ ಪ್ರಮುಖರು ಕಾರ್ಯಕಾರಣಿ ಯಶಸ್ಸಿಗಾಗಿ ಕೆಲಸ ಮಾಡುತ್ತಿದ್ದಾರೆ.
ಕೇಂದ್ರ ಸಚಿವರ ಆಗಮನ: ಪಕ್ಷದ 120 ಪ್ರಮುಖರ ಜೊತೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ. ವಿ. ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರು ಸಹ ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications