ಅಮಿತ್ ಶಾ ಮಾತಿಗೆ ಕಾದು ಕುಳಿತಿದ್ದ ಮಂಗಳೂರಿನ ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ
ಮಂಗಳೂರು, ಫೆಬ್ರವರಿ 20: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕರಾವಳಿ ಜಿಲ್ಲೆಗಳ ಪ್ರವಾಸ ಆರಂಭವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸಕ್ಕಾಗಿ ಅಮಿತ್ ಶಾ ಮಂಗಳೂರಿಗೆ ಬಂದಿಳಿದಿದ್ದಾರೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ಬಂದಿಳಿದ ಅಮಿತ್ ಶಾ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರ ಬಿಜೆಪಿ ಮುಖಂಡರು ಸ್ವಾಗತ ಕೋರಿದರು.

ಆದರೆ ಮಂಗಳೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಭವ್ಯ ಸ್ವಾಗತ ಕೋರಲು ಕೆಂಜಾರಿನಲ್ಲಿ ಸಜ್ಜಾಗಿದ್ದ ಕಾರ್ಯಕರ್ತರಿಗೆ ನಿರಾಸೆಯಾಗಿದೆ. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಕೆಂಜಾರಿನಲ್ಲಿ ಅಮಿತ್ ಶಾ ಬಿಜೆಪಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಮಾತನ್ನು ಆಲಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಕೆಂಜಾರಿನಲ್ಲಿ ಸೇರಿದ್ದರು. ಆದರೆ ಅನಾರೋಗ್ಯದ ಹಿನ್ನಲೆಯಲ್ಲಿ ಅಮಿತ್ ಶಾ ಕೆಂಜಾರಿನ ವೇದಿಕೆಗೆ ಆಗಮಿಸಿ ಕೇವಲ ಕಾರ್ಯಕರ್ತರತ್ತ ಕೈಬೀಸಿ , ಸನ್ಮಾನ ಸೀಕರಿಸಿ ಅಲ್ಲಿಂದ ತೆರಳಿದರು.
ಅಮಿತ್ ಶಾ ಅವರು ಜ್ವರದಿಂದ ಬಳಲುತಿದ್ದು, ಆರೋಗ್ಯ ಸರಿಯಿಲ್ಲದಿರುವ ಕಾರಣ ಕೆಂಜಾರಿನ ವೇದಿಕೆಯಲ್ಲಿ ಅಮಿತ್ ಶಾ ಮಾತನಾಡಿಲ್ಲ ಎಂದು ಹೇಳಲಾಗಿದೆ.

ಇಂದು (ಫೆಬ್ರವರಿ 20) ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಈ ಮೂಲಕ ರಾಜ್ಯದ ಕರಾವಳಿಯಲ್ಲಿ ಅಧಿಕೃತ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಉಪಹಾರ ಮುಗಿಸಿ ಬೆಳಗ್ಗೆ 9 ಗಂಟೆಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಇದಾದ ಬಳಿಕ ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ.
ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನವಶಕ್ತಿ ಸಂಗಮ ನಡೆಯಲಿದ್ದು ಅದರಲ್ಲೂ ಬಾಗವಹಿಸಲಿದ್ದಾರೆ. ಕುಲ್ಕುಂದ ಮತ್ತು ಬಂಟ್ವಾಳದಲ್ಲಿ ನಡೆಯಲಿರುವ ನವಶಕ್ತಿ ಸಂಗಮದಲ್ಲಿ ಸೀಮಿತ ಕಾರ್ಯಕರ್ತರನ್ನು ಹೊರತುಪಡಿಸಿ ಉಳಿದವರಿಗೆ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದು ಹೇಳಲಾಗಿದೆ.
ತಮ್ಮ ಪ್ರವಾಸದ ಸಂದರ್ಭದಲ್ಲಿ ಇತ್ತೀಚಿಗೆ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಕಾರ್ಯಕರ್ತ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ನಂತರ ಅಲ್ಲಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.












Click it and Unblock the Notifications