ಕರಾವಳಿಯಲ್ಲಿ ಸೋಮವಾರದಿಂದ ಅಮಿತ್ ಶಾ ಪ್ರವಾಸ ಆರಂಭ
ಮಂಗಳೂರು, ಫೆಬ್ರವರಿ 19: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸಿದೆ. ರಾಜ್ಯ ಕರಾವಳಿಯಲ್ಲಿ ಮತ್ತೆ ಕಮಲ ಅರಳಿಸುವ ಉದ್ದೇಶ ಹೊಂದಿರುವ ಕೇಸರಿ ಪಕ್ಷದ ಚುನಾವಣಾ ರಣತಂತ್ರದ ಭಾಗವಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಲ್ಲಿನ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಇಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಆನಂತರ ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 20 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಈ ಮೂಲಕ ರಾಜ್ಯದ ಕರಾವಳಿಯಲ್ಲಿ ಅಧಿಕೃತ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಉಪಹಾರ ಮುಗಿಸಿ ಬೆಳಗ್ಗೆ 9 ಗಂಟೆಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಇದಾದ ಬಳಿಕ ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ.
ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನವಶಕ್ತಿ ಸಂಗಮ ನಡೆಯಲಿದ್ದು ಅದರಲ್ಲೂ ಬಾಗವಹಿಸಲಿದ್ದಾರೆ. ಕುಲ್ಕುಂದ ಮತ್ತು ಬಂಟ್ವಾಳದಲ್ಲಿ ನಡೆಯಲಿರುವ ನವಶಕ್ತಿ ಸಂಗಮದಲ್ಲಿ ಸೀಮಿತ ಕಾರ್ಯಕರ್ತರನ್ನು ಹೊರತುಪಡಿಸಿ ಉಳಿದವರಿಗೆ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದು ಹೇಳಲಾಗಿದೆ.
ತಮ್ಮ ಪ್ರವಾಸದ ಸಂದರ್ಭದಲ್ಲಿ ಇತ್ತೀಚಿಗೆ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಕಾರ್ಯಕರ್ತ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಅಶಮಿತ್ ಶಾ ಭೇಟಿ ನೀಡಲಿದ್ದಾರೆ. ನಂತರ ಅಲ್ಲಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದಾರೆ.












Click it and Unblock the Notifications