ಕರಾವಳಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದಾಗಲೆಲ್ಲಾ ಅತಂತ್ರ ವಿಧಾನಸಭೆ!
ಮಂಗಳೂರು, ಮೇ 19 : ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 104 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದೆ.
ಅದರಲ್ಲಿ ಕರಾವಳಿಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿಕೊಂಡಿದ್ದರೂ ಕರಾವಳಿ ಮೇಲೆ ಕಳಂಕ ಬಂದಿದೆ. ಬಿಜೆಪಿ ಕರಾವಳಿಯಲ್ಲಿ ಮುನ್ನಡೆ ಸಾಧಿಸಿದಾಗಲೆಲ್ಲಾ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ.
104 ಅಥವಾ 120: ಬಿಜೆಪಿಗೆ ಸಿಗುತ್ತದೆಯಾ ಶಾಸಕರ ಬಲ?
ಅತಂತ್ರ ವಿಧಾನಸಭೆಗೂ ಕರಾವಳಿಗೂ ಎಲ್ಲಿಲ್ಲದ ನಂಟು. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದ ಎಲ್ಲ ಸಂದರ್ಭಗಳಲ್ಲೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ, ಈ ರೀತಿಯಾಗಿ ಆಗುತ್ತಿರುವುದು ಇದು ಮೂರನೇ ಬಾರಿ.
1983ರಲ್ಲಿ ದ.ಕ.ದಲ್ಲಿ 8 ಸ್ಥಾನ
1983ರಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ 82 ಸ್ಥಾನಗಳನ್ನು ಪಡೆದಿತ್ತು. ಮತ್ತು 18 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಅದರಲ್ಲಿ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಿಂದಲೇ 8 ಸ್ಥಾನಗಳು ದೊರಕಿದ್ದವು.
ಉಡುಪಿಯಲ್ಲಿ 4 , ದ.ಕ.ದಲ್ಲಿ 7 ಸ್ಥಾನ
2004ರಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆಗೆ ಉಂಟಾಗಿತ್ತು. ಆ ಸಂದರ್ಭದಲ್ಲಿ ಬಿಜೆಪಿ 79, ಕಾಂಗ್ರೆಸ್ 65 ಮತ್ತು ಜೆಡಿಎಸ್ 58 ಸ್ಥಾನ ಗಳಿಸಿದ್ದವು. ಆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಮತ್ತು ಉಡುಪಿ ಜಿಲ್ಲೆಯ 6 ಕ್ಷೇತ್ರಗಳ ಪೈಕಿ 4 ರಲ್ಲಿ ಬಿಜೆಪಿ ಜಯ ಗಳಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದವರು, ಸೋತವರು
ಈ ಬಾರಿ ಗೆಲುವು ಸಾಧಿಸಿದವರು
ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡದ ಎಂಟು ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಗೆದ್ದಿದೆ. ಸುಳ್ಯದಲ್ಲಿ ಎಸ್.ಅಂಗಾರ, ಪುತ್ತೂರಿನಲ್ಲಿ ಸಂಜೀವ ಮಠಂದೂರು, ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಯು., ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ, ಮಂಗಳೂರು ಉತ್ತರದಲ್ಲಿ ಡಾ. ವೈ.ಭರತ್ ಶೆಟ್ಟಿ, ಮಂಗಳೂರು ದಕ್ಷಿಣದಲ್ಲಿ ಡಿ.ವೇದವ್ಯಾಸ ಕಾಮತ್ ಮತ್ತು ಮೂಡುಬಿದಿರೆಯಲ್ಲಿ ಉಮಾನಾಥ ಎ. ಕೋಟ್ಯಾನ್ ಬಿಜೆಪಿ ಅಭ್ಯರ್ಥಿಗಳಾಗಿ ಗೆಲುವಿನ ಪತಾಕೆ ಹಾರಿಸಿದ್ದಾರೆ.
ಉಡುಪಿ ಜಿಲ್ಲೆಯ ಉಡುಪಿ ಕ್ಷೇತ್ರದಲ್ಲಿ ಕೆ.ರಘುಪತಿ ಭಟ್, ಕಾರ್ಕಳದಲ್ಲಿ ವಿ.ಸುನಿಲ್ ಕುಮಾರ್, ಕಾಪುವಿನಲ್ಲಿ ಲಾಲಾಜಿ ಆರ್. ಮೆಂಡನ್, ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಬೈಂದೂರಿನಲ್ಲಿ ಸುಕುಮಾರ ಶೆಟ್ಟಿ ಬಿಜೆಪಿಗೆ ಗೆಲುವು ದಕ್ಕಿಸಿಕೊಟ್ಟಿದ್ದಾರೆ.
ಈ ಬಾರಿಯೂ ಅತಂತ್ರ
ಈ ಚುನಾವಣೆಯಲ್ಲಿ ಎರಡೂ ಜಿಲ್ಲೆಗಳ 13 ಕ್ಷೇತ್ರಗಳ ಪೈಕಿ 12ರಲ್ಲಿ ಗೆಲ್ಲುವ ಮೂಲಕ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಈ ಬಾರಿಯೂ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದೆ.
ಆದರೆ 2008ರಲ್ಲಿ ಬಿಜೆಪಿ ಬಹುಮತ ಪಡೆದಿದ್ದಾಗ ಎರಡೂ ಜಿಲ್ಲೆಗಳಲ್ಲಿ ತಲಾ ನಾಲ್ಕು ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ ಗೆಲುವು ದೊರಕಿತ್ತು.