ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಶೀಘ್ರದಲ್ಲೇ ಮಟ್ಟ ಹಾಕುತ್ತೇವೆ: ಸುನೀಲ್ ಕುಮಾರ್
ಮಂಗಳೂರು, ಜುಲೈ, 27: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಮುಖಂಡ 31 ವರ್ಷ ಪ್ರವೀಣ್ ಕುಮಾರ್ ನೆಟ್ಟಾರುನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಪ್ರವೀಣ್ ಹತ್ಯೆಗೆ ರಾಜ್ಯ ಬಿಜೆಪಿ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಕಳೆದ 4 ದಿನಗಳ ಹಿಂದೆ ನಡೆದಿದ್ದ ಅನ್ಯ ಕೋಮಿನ ಯುವಕನೋರ್ವನ ಕೊಲೆಗೆ ಪ್ರತೀಕಾರ ಎನ್ನುವಂತೆ ನಿನ್ನೆ ರಾತ್ರಿ ಬಿಜೆಪಿ ಯುವಮೋರ್ಚಾದ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಲಾಗಿದೆ. ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ, ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಎಂಬ ಯುವಕನನ್ನು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಪ್ರವೀಣ್ ಕೋಳಿ ಮಾಂಸದ ಅಂಗಡಿಯನ್ನು ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಇನ್ನೇನು ಮನೆಗೆ ಹೋಗಲು ಸಿದ್ಧತೆ ಮಾಡುತ್ತಿರುವ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಅವರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಪ್ರವೀಣ್ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪ್ರಮೀಣ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರತಿಕಾರ ಆಯ್ತಾ ಪ್ರವಿಣ್ ಹತ್ಯೆ?
4 ದಿನಗಳ ಹಿಂದೆ ಕಾಸರಗೋಡು ಮೂಲದ ಯುವಕನ ಮೇಲೆ 8 ಜನ ಹಿಂದೂ ಯುವಕರ ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ 2 ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದ. ಈ ಘಟನೆ ಬಳಿಕ ಮುಸ್ಲಿಂ ಸಂಘಟನೆಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟರ್ಗಳು ಹರಿದಾಡಿದ್ದವು. ಇದಾದ ಎರಡೇ ದಿನದ ಅಂತರದಲ್ಲಿ ಹಂತಕರು ಬಿಜೆಪಿ ಕಾರ್ಯಕರ್ತನನ್ನು ಕೊಚ್ಚಿ ಹತ್ಯೆಗೈದಿದ್ದಾರೆ. ಅನ್ಯಕೋಮಿನ ಯುವಕನನ್ನು ಹೊಡೆದು ಹಾಕಿದ್ದ ಯುವಕರು, ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪಗಳು ಕೇಳಿಬಂದಿದ್ದವು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಹೆಚ್ಚಿನ ಪೊಲೀಸ್ ಭದ್ರತೆ
ಪ್ರವೀಣ್ ಹತ್ಯೆಯ ಬಳಿಕ ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಜೊತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಅಲ್ಲಲ್ಲಿ ನಿಯೋಜಿಸಿದ್ದು, ನಾಕಾ ಬಂಧಿ ಹಾಕಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ 4 ತಂಡ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಹತ್ಯೆ ಬಗ್ಗೆ ರಾಜ್ಯದಲ್ಲಿ ಸಚಿವರ ಹೇಳಿಕೆ
ಇನ್ನು ಸರ್ಕಾರ ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ರಾಜ್ಯ ಗೃಹಸಚಿವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಪ್ರವೀಣ್ ಬೆಳ್ಳಾರೆ ಮೇಲೆ ದಾಳಿ, ಕೊಲೆ ಕೃತ್ಯ ಖಂಡನೀಯ. ಘಟನೆ ಬಗ್ಗೆ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಗೃಹ ಸಚಿವರಿಗೆ ಈ ಕೃತ್ಯದ ಬಗ್ಗೆ ವರದಿ ಮಾಡಲಾಗಿದೆ. ಆರೋಪಿಗಳ ಬಂಧನಕ್ಕೆ ಶೀಘ್ರ ತಂಡ ರಚಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕರ್ಮಿಗಳನ್ನು ಮಟ್ಟಹಾಕುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ ಎಂದು ಸುನೀಲ್ ಕುಮಾರ್ ಹೇಳಿರು. ಪ್ರವೀಣ್ ಹತ್ಯೆ ವಿಚಾರದಲ್ಲಿ ಯಾರೂ ಉದ್ವೇಗಕ್ಕೆ ಒಳಗಾಗುವುದು ಬೇಡ. ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಶಾಂತಿ ಪ್ರಿಯರು. ಕೊಲೆ ವಿಚಾರದಲ್ಲಿ ಆರೋಪಿಗಳನ್ನು ಮಟ್ಟಹಾಕುವ ಪ್ರಯತ್ನ ಶೀಘ್ರದಲ್ಲೇ ಆಗಲಿದೆ ಎಂದು ಹೇಳಿದರು.
ಇನ್ನು ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಪ್ರಕರಣದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿಯನ್ನು ಕಾಪಾಡಬೇಕು. ಅಮಾಯಕ ಪ್ರವೀಣ್ರನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರವಾಗಿ ಹೆಡೆಮುರಿ ಕಟ್ಟುತ್ತೇವೆ ಎಂದು ಹೇಳಿದರು.
ನಂತರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಪ್ರತಿಕ್ರಿಯಿಸಿ ಪ್ರವೀಣ್ ನನ್ನ ಪರಿಚಯಸ್ಥ ಹುಡುಗ. ಯಾವುದೇ ಕೆಟ್ಟ ಕೆಲಸಕ್ಕೆ ಹೋದವನು ಅಲ್ಲ. ನಮ್ಮ ಮನೆಯಿಂದ 6-7 ಕಿಲೋ ಮೀಟರ್ ದೂರದಲ್ಲಿ ಪ್ರವೀಣ್ ಮನೆಯಿದೆ. ಪ್ರವೀಣ್ ಕುಟುಂಬದ ಜೊತೆ ನಾನಿದ್ದೇನೆ ಎಂದರು.

ಪೊಲೀಸರಿಂದ ಬಿಗಿ ಬಂದೋಬಸ್ತ್
ಹೀಗೆ ಬಿಜೆಪಿ ಯುವ ಮುಖಂಡನ ಹತ್ಯೆಗೆ ರಾಜ್ಯದೆಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದ್ದು, ಆರೋಪಿಗಳನ್ನು ಹೆಡೆಮುರಿ ಕಟ್ಟುವಂತೆ ಕೂಗುಗಳು ಎದ್ದಿವೆ. ಹಾಗೆಯೇ ದಕ್ಷಿಣ ಕನ್ನಡದ ಹಲವೆಡೆ ಪೊಲೀಸರು ಸೂಕ್ತ ಭದ್ರತೆಯನ್ನು ಕಲ್ಪಿಸಿದ್ದಾರೆ. ಮುಂಜಾಗ್ರತೆಗಾಗಿ ಬೇರೆ ಕಡೆಗಳಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯ ಹಲವೆಡೆ ಆಕ್ರೋಶಗಳು ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಕ್ಕೆ ತರಲು ಪೊಲೀಸರು ಬಿಗಿಬಂದೋಬಸ್ತ್ ಮಾಡಿದ್ದಾರೆ.












Click it and Unblock the Notifications