ಏರ್ ಪೋರ್ಟ್ ನಲ್ಲಿ ಬಾಂಬ್: ಹುಸಿ ಕರೆ ಮಾಡಿದ್ದ ಆರೋಪಿ ಬಂಧನ
ಮಂಗಳೂರು, ಆಗಸ್ಟ್.20: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿರುವುದಾಗಿ ಕರೆ ಮಾಡಿದ್ದ ಆರೋಪಿ ಬಂಧಿಸುವಲ್ಲಿ ಮಂಗಳೂರು ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬುಧವಾರ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್.ವಾಸುದೇವ್ ರಾವ್ ಅವರಿಗೆ ಕರೆ ಮಾಡಿದ್ದ ವ್ಯಕ್ತಿಯು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ವಾಸುದೇವ್ ರಾವ್ ಅವರು ಏರ್ ಪೋರ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ನಿಮ್ಮ ಮನೆಗೆ ಬಾಂಬ್ ಇಡ್ತೀವಿ ಹುಷಾರ್: ಬಿಜೆಪಿ ಸಂಸದರಿಗೆ ಆವಾಜ್!
ಈ ಹಿನ್ನೆಲೆ ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಐಎಸ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು. ಆದರೆ ಯಾವುದೇ ಬಾಂಬ್ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿತ್ತು.
ಬಜ್ಪೆ ಪೊಲೀಸ್ ಠಾಣೆಗೆ ದೂರು:
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವುದಾಗಿ ಹುಸಿ ಕರೆ ಮಾಡಿದ ಆರೋಪಿ ವಿರುದ್ಧ ಏರ್ ಪೋರ್ಟ್ ಆಡಳಿತ ಮಂಡಳಿಯು ಬಜ್ಪೆ ಠಾಣೆಯ ಪೊಲೀಸರಿಗೆ ದೂರು ನೀಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ನಗರ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.