ಯಡಿಯೂರಪ್ಪನವರೇ ಸಿಎಂ ಕ್ಯಾಂಡಿಡೇಟ್: ಸತ್ಯ ಸತ್ಯ ಸತ್ಯ...
ಮಂಗಳೂರು, ಆಗಸ್ಟ್ 22: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ತಿರಂಗಾ ಯಾತ್ರೆ ಮತ್ತು ಸ್ವಾತಂತ್ರ್ಯ 70- ಬಲಿದಾನ ಸ್ಮರಣೆ ಕಾರ್ಯಕ್ರಮದಲ್ಲಿ ಭಾಷಣ ಆರಂಭಿಸುವ ಮುನ್ನ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೇ ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದನ್ನು ಪ್ರಕಟಿಸಿದರು.[ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದ ದೇಶವಿರೋಧಿ ಚಟುವಟಿಕೆ ಸಲ್ಲ]
ಅಮಿತ್ ಶಾ ಈ ಮಾತು ಘೋಷಣೆ ಮಾಡುತ್ತಿದ್ದಂತೆ ಸಭಾಂಗಣದಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು, ಕಿವಿಗಡಚಿಕ್ಕುವಂತೆ ಹರ್ಷೋದ್ಗಾರ ಮಾಡಿದರು. ಕೇಂದ್ರ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್ ವೇದಿಕೆಯಲ್ಲಿದ್ದರು.[ದೆಹಲಿ ತಲುಪಿದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿವಾದ]
ಶಾಸಕರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಸುನೀಲ್ ಕುಮಾರ್, ಎಸ್.ಅಂಗಾರ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವರು ಪ್ರೇಕ್ಷಕರ ಸಾಲಿನಲ್ಲಿ ಆಸೀನರಾಗಿದ್ದರು.[ಈಶ್ವರಪ್ಪ ಕಿವಿ ಹಿಂಡಲು ಹೈಕಮಾಂಡ್ಗೆ ದೂರು?]
ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ ಮೇಲೆ ಪಕ್ಷದೊಳಗೆ ತನಗೆ ಗೌರವ ಸಿಕ್ತಿಲ್ಲ. ಹೀಗಾದರೆ ಪಕ್ಷ ಬಿಟ್ಟುಬಿಡ್ತೀನಿ ಎಂದಿದ್ದ ಯಡಿಯೂರಪ್ಪ ಅವರಿಗೆ ಈ ಪ್ರಕಟಣೆಯಿಂದ ಸಮಾಧಾನ ಆದಂತಿದೆ. ಜಿಲ್ಲಾ ಮಟ್ಟದ ಬಿಜೆಪಿ ಪದಾಧಿಕಾರಿಗಳನ್ನು ಬಿಎಸ್ ವೈ ನೇಮಕ ಮಾಡಿದ ಸಂದರ್ಭದಲ್ಲೂ ಅಸಮಾಧಾನ ವ್ಯಕ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.