ಮಂಗಳೂರಲ್ಲಿ ಸಿಎಎ ಸಮಾವೇಶ; ರಾಜನಾಥ್ ಸಿಂಗ್ ಭಾಗಿ
ಮಂಗಳೂರು, ಜನವರಿ 25 : ಕರ್ನಾಟಕ ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಅಭಿಯಾನ ಆಯೋಜಿಸಿದೆ. ಮಂಗಳೂರಿನಲ್ಲಿ ಜನವರಿ 27ರಂದು ಬೃಹತ್ ಸಮಾವೇಶ ನಡೆಯಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಳ್ಳಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ 8, ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತವರು ಕ್ಷೇತ್ರ. ಆದ್ದರಿಂದ, ಹೆಚ್ಚು ಜನರನ್ನು ಸೇರಿಸಲು ಪ್ರಯತ್ನ ನಡೆಸಲಾಗುತ್ತಿದೆ.
ಮಂಗಳೂರು ನಗರದ ಬಸ್, ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಮಾವೇಶಕ್ಕೆ ಬೆಂಬಲ ನೀಡಿದ್ದಾರೆ. ಜನವರಿ 27ರ ಸೋಮವಾರ ಅಂಗಡಿಗಳನ್ನು ಮುಚ್ಚಿ ವ್ಯಾಪಾರಸ್ಥರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಬೃಹತ್ ಹೋರಾಟ ನಡೆದಿತ್ತು. ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು. ಸಿಎಎ ವಿರುದ್ಧ ನಗರದಲ್ಲಿ ಹಲವು ಪ್ರತಿಭಟನೆಗಳು ನಡೆದಿವೆ.

ಜನಜಾಗೃತಿ ಸಮಾವೇಶ
ಹುಬ್ಬಳ್ಳಿಯಲ್ಲಿ ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಸಮಾವೇಶ ಆಯೋಜನೆ ಮಾಡಿತ್ತು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈಗ ಮಂಗಳೂರಿನಲ್ಲಿ ಸಮಾವೇಶ ನಡೆಯಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಧಾನಸಭಾ ಕ್ಷೇತ್ರಗಳ ಜನರು
ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದಿಂದ ಜನರು ಸಮಾವೇಶಕ್ಕೆ ಆಗಮಿಸಲಿದ್ದು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಜನರು ವಾಹನಗಳನ್ನು ನಿಲ್ಲಿಸಲು ವ್ಯವಸ್ಥೆಯನ್ನು ಸಂಚಾರಿ ಪೊಲೀಸರು ಮಾಡಿದ್ದಾರೆ.

ಭಾಗವಹಿಸುವ ನಾಯಕರು
ಸಿಎಎ ಜನಜಾಗೃತಿ ಸಮಾವೇಶದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ. ವಿ. ಸದಾನಂದ ಗೌಡ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಸಚಿವರು, ಶಾಸಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಂಗಳೂರಿನಲ್ಲಿ ಏಕೆ?
ಬಿಜೆಪಿ ಮಂಗಳೂರಿನಲ್ಲಿಯೇ ಸಮಾವೇಶ ಆಯೋಜನೆ ಮಾಡಲು ಎರಡು ಕಾರಣಗಳಿವೆ. ಒಂದು ಬಿಜೆಪಿ ರಾಜ್ಯಾಧ್ಯಕ್ಷರ ತವರು ಕ್ಷೇತ್ರ, ಎರಡು ಮಂಗಳೂರಿನಲ್ಲಿ ಸಿಎಎ ವಿರುದ್ಧ ಬೃಹತ್ ಹೋರಾಟ ನಡೆದಿತ್ತು. ಪೊಲೀಸರ ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು.












Click it and Unblock the Notifications