ಹಿಂದೂ ಮುಖಂಡನ ಮೇಲೆ ಹಲ್ಲೆ: ಸುಬ್ರಹ್ಮಣ್ಯ ಪೇಟೆ ಸಂಪೂರ್ಣ ಬಂದ್
ಮಂಗಳೂರು, ಅಕ್ಟೋಬರ್.25: ಸುಬ್ರಹ್ಮಣ್ಯದಲ್ಲಿ ಬುಧವಾರ (ಅ.25) ನಡೆದ ಹಿಂದೂ ಮುಖಂಡನ ಮೇಲೆ ಹಲ್ಲೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಗುರುವಾರ ಸುಬ್ರಹ್ಮಣ್ಯ ಪೇಟೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
ಹಲ್ಲೆ ಖಂಡಿಸಿ ಸುಬ್ರಹ್ಮಣ್ಯ ಜನರು ಸ್ವಯಂಪ್ರೇರಿತ ಬಂದ್ ಮಾಡಿದ್ದಾರೆ. ಆದರೆ ಹೊರ ಪ್ರದೇಶಗಳಿಂದ ಬಂದ ಭಕ್ತಾಧಿಗಳಿಗೆ ತೊಂದರೆಯಾಗದಿರಲಿ ಎನ್ನುವ ಕಾರಣಕ್ಕೆ ಹೋಟೆಲ್ ಗಳಿಗೆ ವಿನಾಯಿತಿ ನೀಡಲಾಗಿದೆ.
11 ಗಂಟೆಯ ಬಳಿಕ ಹೋಟೆಲ್ ಗಳೂ ಮುಚ್ಚುವ ಸಾಧ್ಯತೆ ಇದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಮುಂಭಾಗ ಸಾರ್ವಜನಿಕರು ಪ್ರತಿಭಟನೆ ನಡೆಸಲಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ.

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂ ಫೈರ್ ಬ್ರಾಂಡ್ ನಾಯಕಿಯೆಂದು ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂಡ ನಿನ್ನೆ ಬುಧವಾರ (ಅ.25) ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂದೂ ಜಾಗರಣಾ ವೇದಿಕೆ ಮುಖಂಡ ಗುರುಪ್ರಸಾದ್ ಪಂಜ ಅವರ ಅಂಗಡಿಗೆ ನುಗ್ಗಿದ್ದರು.

ಈ ಸಂದರ್ಭದಲ್ಲಿ ಇತ್ತಂಡಗಳ ನಡುವೆ ಘರ್ಷಣೆ ಸಂಭವಿಸಿ ಗುರುಪ್ರಸಾದ್ ಮೇಲೆ ಹಲ್ಲೆ ನಡೆಸಲಾಗಿತ್ತು. ನಂತರ ಹಲ್ಲೆಗೊಳಗಾದ ಗುರುಪ್ರಸಾದ್ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚೈತ್ರಾ ಕುಂದಾಪುರ ಹಾಗೂ ಇತರ 8 ಜನರನ್ನು ಸುಬ್ರಹ್ಮಣ್ಯ ಪೋಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದು, ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡೂ ಗುಂಪುಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರವನ್ನೂ ನಡೆಸಿದ್ದಾರೆ.











Click it and Unblock the Notifications