ಸೌಜನ್ಯ ಕೊಲೆ ಪ್ರಕರಣ: ಆರೋಪಿ ಸಂತೋಷ್ ರಾವ್ ಗೆ ಜಾಮೀನು
ಇತ್ತೀಚೆಗೆ ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದ ಬೆನ್ನಲ್ಲಿಯೇ ಇದೀಗ ಸಿಬಿಐ ಕೋರ್ಟ್ ಸೌಜನ್ಯಾ ಕೊಲೆ ಆರೋಪಿ ಸಂತೋಷ್ ರಾವ್ ಗೆ ಜಾಮೀನು ನೀಡಿದೆ
ಮಂಗಳೂರು, ಏಪ್ರಿಲ್ 14 : ಉಜಿರೆಯ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ಮಾಡಿದೆ.
ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ಸಿಬಿಐ ಕೋರ್ಟ್ 1ಲಕ್ಷ ರು. ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂದು ಇತರೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. [ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ತಡೆ]
ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.
ಆದರೆ ಸ್ಥಳೀಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಲಾಯಿತು. ಕುಂದಾಪುರ ಮೂಲದ ಗುತ್ತಿಗೆ ಕಾರ್ಮಿಕ ಸಂತೋಷ್ ರಾವ್ ನನ್ನು ಪೊಲೀಸರು ಬಂಧಿಸಿದ್ದರು.
ಇತ್ತೀಚೆಗೆ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆದೇಶಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.