ಸುರಿವ ಮಳೆ ನಡುವೆಯೇ ಮಂಗಳೂರಿನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮಂಗಳೂರು, ಆಗಸ್ಟ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಧಾರಾಕಾರ ಮಳೆಯ ನಡುವೆಯೇ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಧ್ವಜಾರೋಹಣ ನೆರವೇರಿಸಿದರು.
ಧೋ ಎಂದು ಸುರಿಯುತ್ತಿರುವ ಮಳೆಯ ನಡುವೆ ಕೊಡೆ ಹಿಡಿದುಕೊಂಡು ಧ್ವಜಾರೋಹಣ ನೇರವೇರಿಸಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, "ರಾಜ್ಯದಲ್ಲಿ 100 ವರ್ಷಗಳಲ್ಲಿ ಕಂಡೂಕೇಳರಿಯದ ನೆರೆ ಪ್ರವಾಹ ಉಂಟಾಗಿದೆ. ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗಿದೆ. ಜನಸಾಮಾನ್ಯರ ಬದುಕು ಬೀದಿ ಪಾಲಾಗಿ ಸಂಕಷ್ಟದಲ್ಲಿದ್ದು, ಅವರಿಗೆ ಪುನರ್ವಸತಿ ಸಂಬಂಧಿಸಿದಂತೆ ಜಿಲ್ಲೆಯ ಜನರು ನೆರವು ನೀಡಿ ಸರ್ಕಾರದ ಜೊತೆ ಸಹಕರಿಸಬೇಕು" ಎಂದು ಮನವಿ ಮಾಡಿದರು.

ದೇಶದೆಲ್ಲೆಡೆ 73ನೇ ಸ್ವಾತಂತ್ರ್ಯ ಹಬ್ಬದ ಸಂಭ್ರಮ: ಚಿತ್ರಗಳು
"ಈ ಬಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಮಟ್ಟದಲ್ಲಿ ಅನೇಕ ಕಡೆ ಆಸ್ತಿಪಾಸ್ತಿ, ರಸ್ತೆಗಳು ನಾಶವಾಗಿವೆ. ಹಾನಿಗೊಂಡ ಪ್ರದೇಶಗಳ ಪುನರ್ ನಿರ್ಮಾಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾಮಗಾರಿ ನಿರಂತರವಾ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಮ್ಮೊಂದಿಗಿದೆ" ಎಂದು ನೆರೆ ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಭರವಸೆ ನೀಡಿದರು. ಸುರಿಯುತ್ತಿರುವ ಮಳೆ ನಡುವೆಯೇ ಪೊಲೀಸ್, ಎನ್ ಸಿಸಿ ತಂಡಗಳು ಆಕರ್ಷಕ ಪಥಸಂಚಲನ ನಡೆಸಿದವು.












Click it and Unblock the Notifications