ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟ್ ರಸ್ತೆ ಬಂದ್
ಮಂಗಳೂರು, ಆಗಸ್ಟ್ 15: ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯ ಹಲವು ಕಡೆ ಗುಡ್ಡ ಕುಸಿದಿದ್ದ ಪರಿಣಾಮ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಗಿಯದ ಕಾರಣ ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡ ಹಾಗು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ತತ್ತರಿಸಿದೆ. ಭಾರಿ ಮಳೆ ಹಾಗೂ ನದಿ ಪ್ರವಾಹದಿಂದಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಹಲವಾರು ಬಾರಿ ಭೂಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ.
ಕುಸಿಯುವ ಭೀತಿಯಲ್ಲಿ ತೆಂಕಿಲ ದರ್ಖಾಸು ಗೇರು ಗುಡ್ಡ; 11 ಕುಟುಂಬಗಳು ಸ್ಥಳಾಂತರ
ಘಾಟಿ ರಸ್ತೆಯ ಹಲವಾರು ತಿರುವುಗಳಲ್ಲಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ರಸ್ತೆಯೇ ನಾಶವಾಗುವ ಹಂತದಲ್ಲಿದೆ. ಇದರಿಂದಾಗಿ ಬೆಳ್ತಂಗಡಿ ಚಿಕ್ಕಮಗಳೂರು ಸಂಪರ್ಕ ಕಡಿತವಾಗಿದೆ. ಘಾಟಿ ರಸ್ತೆಯ ಹಲವಾರು ತಿರುವುಗಳಲ್ಲಿ ಭೂಭಾಗ ಬಾಯ್ತೆರೆದಿದ್ದು ಅಪಾಯಕಾರಿಯಾಗಿವೆ.
ಕರಾವಳಿಯಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಮತ್ತೆ ರೆಡ್ ಅಲರ್ಟ್
ಘಾಟಿ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು 1 ತಿಂಗಳ ಕಾಲಾವಕಾಶ ಬೇಕಾಗಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.