ಸಿದ್ದರಾಮಯ್ಯ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಯಡಿಯೂರಪ್ಪ
ರಾಜ್ಯದಲ್ಲಿ ನಿಗದಿತ ಅವಧಿಗೂ ಮುಂಚಿತವಾಗಿ ವಿಧಾನಸಭೆ ಚುನಾವಣೆ ಎದುರಾಗಲಿದೆ. ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕರೆ ನೀಡಿದ್ದಾರೆ
ಮಂಗಳೂರು, ಅಕ್ಟೋಬರ್ 31: ರಾಜ್ಯದಲ್ಲಿ ನಿಗದಿತ ಅವಧಿಗೂ ಮುಂಚಿತವಾಗಿ ವಿಧಾನಸಭೆ ಚುನಾವಣೆ ಎದುರಾಗಲಿದೆ. ಪಕ್ಷದ ಕಾರ್ಯಕರ್ತರು ಸಿದ್ಧರಾಗಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕರೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ, ಇದಕ್ಕೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಸರಕಾರ ಅವಧಿಗಿಂತ ಮೂರು ತಿಂಗಳ ಮುಂಚೆಯೆ ಚುನಾವಣೆಗೆ ಹೋಗಲು ಸಿದ್ದತೆ ನಡೆಸುತ್ತಿದೆ. ಕಾಂಗ್ರೆಸ್ನಲ್ಲಿ ಗೊಂದಲಗಳು ಜಾಸ್ತಿಯಾಗುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನವನ್ನು ನಿಶ್ಚಿತವಾಗಿ ಪಡೆಯಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅವರು ಪಕ್ಷ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸಿ, ಹೆಚ್ಚಿನ ಗಮನ ನೀಡಲು ಸೂಚಿಸಿದ್ದಾರೆ. ಮತ್ತೊಮ್ಮೆ ಚುನಾವಣೆ ತಯಾರಿ ಕುರಿತು ಸಭೆ ನಡೆಯಲಿದೆ ಎಂದು ತಿಳಿಸಿದರು.
ಇಡೀ ರಾಜ್ಯದಲ್ಲಿ ಅಶಾಂತಿಯ ವಾತವರಣವಿದ್ದು ಟಿಪ್ಪು ಜಯಂತಿ ಆಚರಣೆ ನಡೆಸುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸಬಾರದೆಂದು ಅವರು ಒತ್ತಾಯಿಸಿದರು.
ಸ್ಟೀಲ್ ಬ್ರಿಡ್ಜ್ ನಲ್ಲಿ 500 ಕೋಟಿ ರೂಪಾಯಿಯನ್ನು ಲೂಟಿ ಮಾಡಲು ಯೋಜನೆಯನ್ನು ಸರಕಾರ ರೂಪಿಸಿದೆ. ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಅವರಿಗೆ ವಿಶ್ವಾಸವಿಲ್ಲ ಎಂದು ಹೇಳಿದರು.
ಪಕ್ಷದ ದಲಿತ ನಾಯಕರಾಗಿದ್ದ ಮಾಜಿ ಸಚಿವ ಶ್ರೀನಿವಾಸ್ ಅವರು ಕಾಂಗ್ರೆಸ್ಸಿನ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನ. 7 ರಂದು ಮೈಸೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನಾಚರಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಪಕ್ಷ ನಾಯಕರುಗಳಾದ ಸದಾನಂದ ಗೌಡ, ಅನಂತ್ಕುಮಾರ್ ಮತ್ತಿತ್ತರ ನಾಯಕರೊಂದಿಗೆ ರಾಜ್ಯದಲ್ಲೂ ಸೈನಿಕರೊಂದಿಗೆ ದೀಪಾವಳಿ ಹಬ್ಬವನ್ನಾಚರಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಸಂಸದ ನಳಿನ್ಕುಮಾರ್ ಕಟೀಲ್, ವಿಧಾನಪರಿಷತ್ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಪಕ್ಷ ಪ್ರಮುಖರುಗಳಾದ ಕಿಶೋರ್ ರೈ, ಉಮಾನಾಥ ಕೋಟ್ಯಾನ್, ಬ್ರಿಜೇಶ್ ಚೌಟ, ಮಾಜಿ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.












Click it and Unblock the Notifications