ಭಾರತ್ ಬಂದ್: ಮಂಗಳೂರಿನಲ್ಲಿ ಬಿಜೆಪಿ ಶಾಸಕ, ಕೈ ಕಾರ್ಯಕರ್ತರ ನಡುವೆ ಘರ್ಷಣೆ
Recommended Video

ಮಂಗಳೂರು, ಸೆಪ್ಟೆಂಬರ್ 10: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಬಿಸಿ ಕರಾವಳಿಗೂ ತಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಬಂದ್ ವಾತಾವರಣ ಗೋಚರಿಸತೊಡಗಿತ್ತು.
ಬಿಜೆಪಿ ಭದ್ರ ಕೋಟೆಯಲ್ಲಿ ಬಂದ್ ಯಶಸ್ವಿಯಾಗುವುದೇ ಅನುಮಾನ ಅಂತಲೇ ಹೇಳಲಾಗುತ್ತಿತ್ತು. ಆದರೆ ಕಾಂಗ್ರೆಸ್ ಕರೆನೀಡಿರುವ ಭಾರತ್ ಬಂದ್ ಗೆ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ಖಾಸಗಿ ಹಾಗೂ ಸರಕಾರಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದ್ದರೂ ಕೆಲವೆಡೆ ಅಂಗಡಿ ತೆರೆದು ವ್ಯಾಪಾರ ನಡೆಸಲಾಗುತ್ತಿದೆ.
ಮಂಗಳೂರಿನ ಲೈಫ್ ವೈನ್ ಎಂದೇ ಹೇಳಲಾಗುವ ಖಾಸಗಿ ಸಿಟಿ ಬಸ್ ಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜನ ಸಂಚಾರ ವಿರಳವಾಗಿದೆ. ಆದರೆ ಈ ನಡುವೆ ನಗರದ ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಬಲವಂತದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ.

ಕಾಂಗ್ರೆಸ್ ಕಾರ್ಯಕರ್ತರು ಜ್ಯೋತಿ ವೃತ್ತದ ಬಳಿ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ರಸ್ತೆಯಲ್ಲಿ ಸಾಗಿ ಬಂದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ಕೂಡ ನಡೆದಿದ್ದು, ಮಂಗಳೂರಿನ ಜ್ಯೋತಿ ವೃತ್ತದ ಬಳಿ ಈ ಘಟನೆ ನಡೆದಿದೆ.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರ ಕಾರು ಜ್ಯೋತಿ ವೃತ್ತದ ಬಳಿ ಬರುತ್ತಿದ್ದಂತೆ ತಡೆಹಿಡಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೂ ಹಾಗು ಶಾಸಕ ವೇದವ್ಯಾಸ್ ಕಾಮತ್ ಅವರಿಗೂ ವಾಗ್ವಾದ ನಡೆದಿದೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಬಲವಂತದ ಬಂದ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ್ ಕಾಮತ್, ಬಲವಂತದ ಬಂದ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಲ್ಲದೇ ಪೊಲೀಸ್ ಇಲಾಖೆ ಕಾಂಗ್ರೆಸ್ ಹೇಳಿದಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಕಮಿಷನರ್ ಟಿ ಆರ್ ಸುರೇಶ್ ಹಾಗೂ ಶಾಸಕ ವೇದವ್ಯಾಸ ಕಾಮತ್ ನಡುವೆ ಮಾತಿನ ಚಕಮಕಿಯೂ ನಡೆದಿದೆ.











Click it and Unblock the Notifications