ಕರ್ನಾಟಕ- ಕೇರಳ ಗಡಿಯಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತರು- ಪೊಲೀಸರ ಮಧ್ಯೆ ಘರ್ಷಣೆ
ಮಂಗಳೂರು, ಮೇ 26: ಮಂಗಳೂರು ಹೊರವಲಯದ ಕೇರಳ ಗಡಿಯಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತರು ಹಾಗೂ ಕರ್ನಾಟಕ ಪೊಲೀಸರ ಮಧ್ಯೆ ಘರ್ಷಣೆ ಸಂಭವಿಸಿದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು ಹೊರವಲಯದ ತಲಪಾಡಿ ಟೋಲ್ ಗೇಟ್ ಬಳಿ ಪೊಲೀಸರ ಮೇಲೆ ಶನಿವಾರ ಸಂಜೆ ಕಲ್ಲು ತೂರಾಟ ನಡೆದಿದೆ. ಅದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಕರ್ನಾಟಕ ಗಡಿ ಕೇರಳದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ ಚುನಾವಣೆಯಲ್ಲಿ ಜಯ ಗಳಿಸಿದ್ದು, ಶನಿವಾರ ಸಂಜೆ ವಿಜಯೋತ್ಸವ ಆಚರಣೆ ನಡೆಸಲಾಗಿತ್ತು. ಬೈಕ್ ಯಾತ್ರೆ ತಲಪಾಡಿ ಟೋಲ್ ಗೇಟ್ ಬಳಿ ಕರ್ನಾಟಕದ ಗಡಿ ಒಳಗೆ ಬರಲು ಯತ್ನಿಸಿದ್ದ ಮುಸ್ಲಿಂ ಲೀಗ್ ಕಾರ್ಯಕರ್ತರ ಗುಂಪನ್ನು ತಡೆಯಲು ಪೊಲೀಸರು ಮುಂದಾದಾಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಆರಂಭದಲ್ಲಿ ನಾಲ್ಕೈದು ಬೈಕ್ ಗಳಲ್ಲಿ ಮುಸ್ಲಿಂ ಲೀಗ್ ಬಾವುಟದೊಂದಿಗೆ ಕರ್ನಾಟಕದ ಗಡಿಯೊಳಕ್ಕೆ ಬಂದ ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಾಗ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಸ್ವಲ್ಪ ಸಮಯದ ಬಳಿಕ ಮತ್ತಷ್ಟು ಬೈಕ್ ಗಳಲ್ಲಿ ಅಲ್ಲಿಗೆ ಬಂದ ಮುಸ್ಲಿಂ ಲೀಗ್ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಕಲ್ಲು ತೂರಾಟದಲ್ಲಿ ಕೆಲ ಪೊಲೀಸರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಕೂಡ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಕಾಸರಗೋಡಿನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈಗ ಸ್ಥಳದಲ್ಲಿ ಪರಿಸ್ಥತಿ ಶಾಂತವಾಗಿದೆ.












Click it and Unblock the Notifications