ಪ್ರವೀಣ್ ಕುಟುಂಬ ಭೇಟಿ ಮಾಡಿದ ಸಿಎಂ, 25 ಲಕ್ಷ ರೂ ಪರಿಹಾರದ ಚೆಕ್ ಹಸ್ತಾಂತರ
ಮಂಗಳೂರು, ಜುಲೈ 28 : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಗುರುವಾರ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಸಾಂತ್ವನ ಹೇಳಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. " ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, " ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರಕಾರದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ. ಪ್ರವೀಣ್ ಕುಟುಂಬದವರಿಗೆ ಪಕ್ಷ ಮತ್ತು ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಅವರ ಜೀವನದ ಮುಂದಿನ ಭವಿಷ್ಯಕ್ಕೆ ಸಹಕಾರ ನೀಡಲಾಗುವುದು " ಎಂದರು.
ಪ್ರವೀಣ್ ಆತ್ಮಕ್ಕೆ ಕೊಲೆಗೈದವರ ಶಿಕ್ಷೆಯಾದಾಗ ಮಾತ್ರ ಶಾಂತಿ ದೊರಕಲಿದೆ. ಅವರ ಕುಟುಂಬದವರು ಇದೇ ಮಾತನ್ನು ಹೇಳಿದ್ದಾರೆ. ಬೇರೆ ಯಾರಿಗೂ ಈ ರೀತಿ ಆಗಬಾರದು , ಇದರ ಹಿಂದಿರುವ ಸಂಘಟನೆಗಳ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟುಕರಿಗೆ ಶಿಕ್ಷೆ ಆಗುವ ಕೆಲಸವನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದರು.

ಭಯೋತ್ಪಾದಕ ಕೃತ್ಯ
ಇದೊಂದು ಪೂರ್ವಯೋಜಿತ ಕೃತ್ಯ ಎಂದು ಮೇಲುನೋಟಕ್ಕೆ ತಿಳಿಯುತ್ತದೆ. ಮೊನ್ನೆ ನಡೆದ ಪ್ರವೀಣ್ ಹತ್ಯೆ ಪ್ರಕರಣ ಖಂಡನೀಯ. ಕಳೆದ ಹತ್ತು ವರ್ಷಗಳಲ್ಲಿ ಈ ಭಾಗದಲ್ಲಿ ಇಂತಹ ಚಟುವಟಿಕೆಗಳು ನಡೆಯುತ್ತಿದೆ. ಸಮಾಜಘಾತುಕ ಶಕ್ತಿಗಳು ಬೆಂಬಲ ನೀಡಿರುವುದುರಿಂದ ನಿರ್ಭೆಡೆಯಿಂದ ಈ ಘಟನೆಯನ್ನು ನಡೆಸಲಾಗಿದೆ. ಇದನ್ನು ನಾವು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ. ದೇಶವನ್ನು ಛಿದ್ರ ಮಾಡುವ ಯೋಜನಾಬದ್ಧವಾದ ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಎಡಿಜಿಪಿ ನೇತೃತ್ವದಲ್ಲಿ ತನಿಖೆ
ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೆ ಪೊಲೀಸ್ ತಂಡಗಳು ತನಿಖೆ ಪ್ರಾರಂಭಿಸಿವೆ. ಆರೋಪಿಗಳು ರಾಜ್ಯದ ಗಡಿ ದಾಟಿರಬಹುದು. ಈ ಎಲ್ಲಾ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ. ಕೆಲವರನ್ನು ವಶಕ್ಕೆ ತೆಗೆದುಕೊಂಡು, ಅವರಿಂದ ಪಡೆದ ಮಾಹಿತಿಯಿಂದ ತನಿಖೆ ಮುಂದುವರೆಯಲಿದೆ. ಅತಿ ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂಬ ವಿಶ್ವಾಸವಿದೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಹಲವಾರು ವರ್ಷಗಳಿಂದ ದುಷ್ಕೃತ್ಯಗಳಲ್ಲಿ ತೊಡಗಿಕೊಂಡಿರುವ ಸಮಾಜಘಾತುಕ ಶಕ್ತಿಗಳ ಜಾಡು ಹಿಡಿದು, ತನಿಖೆ ಕೈಗೊಂಡು ಹಿಂದಿರುವ ಸಂಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದರು.
ಮಸೂದ್ ಹತ್ಯೆಗೂ ಹಾಗೂ ಪ್ರವೀಣ್ ಹತ್ಯೆಗೂ ಸಂಬಂಧವಿದೆಯೇ ಎಂಬ ತನಿಖೆಯಿಂದ ತಿಳಿಯಲಿದೆ. ಪೊಲೀಸ್ ಅಧಿಕಾರಿಗಳ ಕರ್ತವ್ಯ ವೈಫಲ್ಯವಾಗಿದ್ದರೆ ಅದನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

ಪಿಎಫ್ಐ ಬ್ಯಾನ್ ಮಾಡಲು ಕ್ರಮ
ಕರ್ನಾಟಕ ರಾಜ್ಯಕ್ಕೆ ರಾಷ್ಟ್ರೀಯ ತನಿಖಾ ದಳವನ್ನು ಒದಗಿಸಲು ಕೋರಲಾಗಿದೆ. ವಿಶೇಷವಾಗಿ ಮಂಗಳೂರು ಭಾಗಕ್ಕೆ ಎನ್ಐಎ ಅವಶ್ಯಕತೆ ಇದೆ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ. ಪ್ರಾಥಮಿಕ ತನಿಖಾ ವರದಿಯ ಆಧಾರವಾಗಿ ಹೆಚ್ಚುವರಿ ತನಿಖೆಯ ಅವಶ್ಯಕತೆ ಇದ್ದಲ್ಲಿ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗುವುದು. ಈ ಘಟನೆಗೆ ಬೆಂಬಲ ನೀಡಿರುವ ಬಗ್ಗೆಯೂ ತನಿಖೆ ನಡೆಸಿ , ಈ ಕುಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ ಜಾಲವನ್ನು ಭೇಧಿಸಲಾಗುವುದು. ಪಿಎಫ್ಐ ಬ್ಯಾನ್ ಮಾಡಲು ಕ್ರಮಗಳು ಪ್ರಾರಂಭವಾಗಿದೆ. ಈ ರೀತಿಯ ದುಷ್ಕೃತ್ಯಗಳು ಭಾರತದ ವಿವಿಧ ರಾಜ್ಯಗಳಲ್ಲಿ ನಡೆದಿದ್ದು, ದೇಶದ ಮಟ್ಟದಲ್ಲಿ ಸರಿಯಾದ ಕ್ರಮವನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಯುಪಿ ಮಾದರಿ ಸರಕಾರಕ್ಕೆ ಒತ್ತಾಯ
ಪ್ರವೀಣ್ ಹತ್ಯೆಗೈದ ಆರೋಪಿಗಳನ್ನು ಶೂಟ್ ಮಾಡಿ, ಅವರನ್ನು ಗಲ್ಲಿಗೇರಿಸಬೇಕು, ಆ ಕೃತ್ಯಕ್ಕೆ ಬೆಂಬಲವಾಗಿ ನಿಂತವರಿಗೂ ಗಲ್ಲು ಶಿಕ್ಷೆ ವಿಧಿಸಿದರೆ, ಆಗ ನನಗೂ ತೃಪ್ತಿ ಸಿಗುತ್ತದೆ, ನನ್ನ ಗಂಡನ ಆತ್ಮಕ್ಕೂ ಶಾಂತಿ ಸಿಗಲಿದೆ ಎಂದು ಪ್ರವೀಣ್ ಪತ್ನಿ ನೂತನ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಬೊಮ್ಮಾಯಿ ಎದುರೇ ಕಾರ್ಯಕರ್ತರು ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿ ರಾಜ್ಯದಲ್ಲಿ ಯುಪಿ ಮಾಡೆಲ್ ಸರಕಾರ ಜಾರಿಗೆ ತರಬೇಕೆಂದು ಒತ್ತಾಯ ಮಾಡಿದರು.












Click it and Unblock the Notifications