ಮೂಡಬಿದರೆ ಬಳಿ ಕಾಲೇಜು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಓರ್ವಳ ಸ್ಥಿತಿ ಗಂಭೀರ
ಮಂಗಳೂರು, ಆಗಸ್ಟ್ 13: ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಅತ್ಯಂತ ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ಮೂಡಬಿದರೆ ಸಮೀಪದ ಬೆಳುವಾಯಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಓರ್ವಳ ಸ್ಥಿತಿ ಗಂಭೀರವಾಗಿದೆ.
ಬೆಳುವಾಯಿ ಮುಡಾಯಿ ಕಾಡು ನಿವಾಸಿ ಜಗನ್ನಾಥ ಮಡಿವಾಳರ ಮಗಳು ಶುಭಲಕ್ಷ್ಮಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ. ಉಡುಪಿ ಹಿರಿಯಡ್ಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಶುಭಲಕ್ಷ್ಮಿ ತನ್ನ ಮೂವರು ಗೆಳತಿಯರೊಂದಿಗೆ ಕಾರ್ಕಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದು ಈ ಸಂದರ್ಭದಲ್ಲಿ ಘಟನೆ ನಡೆದಿದೆ.

ಮೂಡುಬಿದಿರೆ ಕಡೆಯಿಂದ ಅತೀ ವೇಗದಿಂದ ಬಂದ ಕಾರು ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಶುಭಲಕ್ಷ್ಮಿ 15 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದಾಳೆ. ತೀವ್ರವಾಗಿ ಗಾಯಗೊಂಡ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಉಳಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶುಭಲಕ್ಮಿ ಅವರ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ನಂತರ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅದರಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications