'ಮೂಲ ದಾಖಲೆಗಳನ್ನು ಇಟ್ಟುಕೊಂಡ ಕಾಲೇಜುಗಳ ವಿರುದ್ಧ ಕ್ರಿಮಿನಲ್ ಕೇಸ್'
ಮಂಗಳೂರು, ಅಕ್ಟೋಬರ್ 01 : ಮೂಲದಾಖಲೆಗಳನ್ನಿಟ್ಟುಕೊಂಡು ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿದ್ದ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಚಾಟಿ ಏಟು ನೀಡಿದೆ. ಮೂಲ ದಾಖಲೆಗಳನ್ನು ವಾಪಸ್ ನೀಡದಿದ್ದರೆ ಕಾಲೇಜುಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರವೇಶ ಸಂದರ್ಭದಲ್ಲಿ ಪಡೆದುಕೊಂಡ ಎಲ್ಲಾ ಮೂಲ ದಾಖಲೆಗಳನ್ನು ಕೂಡಲೇ ಹಿಂದಿರುಗಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕೇಸು ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. 'ನಿಯಮಾನುಸಾರ ವಿದ್ಯಾರ್ಥಿಗಳ ಅಂಕಪಟ್ಟಿ ಸೇರಿದಂತೆ ಪ್ರವೇಶ ಸಂದರ್ಭದಲ್ಲಿ ಪಡೆದ ಮೂಲ ಶೈಕ್ಷಣಿಕ ದಾಖಲೆಗಳನ್ನು ಶಿಕ್ಷಣ ಸಂಸ್ಥೆಗಳು ತಮ್ಮಲ್ಲಿಟ್ಟುಕೊಳ್ಳುವಂತಿಲ್ಲ' ಎಂದರು.
'ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧದಲ್ಲೇ ಬಿಟ್ಟು ಹೋದರೆ ಅಥವಾ ಆ ಶಿಕ್ಷಣ ಸಂಸ್ಥೆಯನ್ನು ತ್ಯಜಿಸಿದರೆ ಶಿಕ್ಷಣ ಸಂಸ್ಥೆಗಳು ಪೂರ್ತಿ ಕೋರ್ಸಿನ ಎಲ್ಲಾ ವರ್ಷದ ಶುಲ್ಕವನ್ನು ಕಟ್ಟುವಂತೆ ಸೂಚಿಸುತ್ತಿವೆ. ಇಲ್ಲದಿದ್ದರೆ ಮೂಲದಾಖಲೆಗಳನ್ನು ನೀಡದೆ ಸತಾಯಿಸುತ್ತಿರುವ ಬಗ್ಗೆ ಹಲವಾರು ದೂರುಗಳು ಬರುತ್ತಿವೆ' ಎಂದು ಜಿಲ್ಲಾಧಿಕಾರಿಗಳು ಹೇಳಿದರು.
'ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ತಾವು ತೆಗೆದಿರಿಸಿಕೊಂಡ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಮುಂದಿನ ಒಂದು ತಿಂಗಳೊಳಗೆ ಹಿಂದಿರುಗಿಸಬೇಕು. ಈ ಬಗ್ಗೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ಕಳುಹಿಸಲಾಗುವುದು' ಎಂದು ಎಲ್ಲಾಧಿಕಾರಿಗಳು ತಿಳಿಸಿದರು.
'ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಪಾಸಣೆ ಮಾಡಲಾಗುವುದು. ಯಾವುದೇ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಂಡ ಪ್ರಕರಣ ಕಂಡುಬಂದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಕೇಸು ಹೂಡಲಾಗುತ್ತದೆ' ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಮಾತನಾಡಿ, 'ಜಿಲ್ಲೆಯ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿ ಸ್ನೇಹಿ ವಾತಾವರಣ ರೂಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ಗಳ ಮೂಲಭೂತ ಸೌಕರ್ಯಗಳ ಅಲ್ಲಿನ ಆಡಳಿತ ವ್ಯವಸ್ಥೆಗಳ ಬಗ್ಗೆ ತಪಾಸಣೆ ನಡೆಸಬೇಕು' ಎಂದರು.
'ಯಾವುದೇ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಆ ಶಿಕ್ಷಣ ಸಂಸ್ಥೆಯಲ್ಲಿ ಕಲಿಯಲು ಇಚ್ಚೆ ಇಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗೆ ಸೂಕ್ತ ರೀತಿಯಲ್ಲಿ ಶಿಕ್ಷಣ ಸಂಸ್ಥೆಯಿಂದ ಹೊರಬರುವಂತ ವಾತಾವರಣವನ್ನು ಶಿಕ್ಷಣ ಇಲಾಖೆ ಕಲ್ಪಿಸಿಕೊಡಬೇಕು. ಶುಲ್ಕ ಕಟ್ಟಲು ಸತಾಯಿಸುವಂತಹ ಘಟನೆಗಳಿಗೆ ಅವಕಾಶ ನೀಡದೆ, ಈಗಾಗಲೇ ಕಟ್ಟಿರುವ ಶುಲ್ಕವನ್ನು ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು' ಎಂದು ಕೃಪಾ ಆಳ್ವ ತಿಳಿಸಿದರು.












Click it and Unblock the Notifications